Social Mediaದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ ತಂದರೆ ಕಠಿಣಕ್ರಮ: ಮಂಗಳೂರು ಪೊಲೀಸರ ಎಚ್ಚರಿಕೆ
Team Udayavani, Jul 11, 2023, 7:03 PM IST
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತಹ ಪೋಸ್ಟ್, ಕಮೆಂಟ್ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಮಂಗಳೂರು ಪೊಲೀಸರು ಎಚ್ಚರಿಸಿದ್ದಾರೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ವಾಟ್ಸಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು ತನಿಖೆಯಲ್ಲಿದೆ ಎಂದಿದ್ದಾರೆ.
ಇದನ್ನೂ ಓದಿ:ಕೊಳೆತ ಸ್ಥಿತಿಯಲ್ಲಿ ಖ್ಯಾತ ವಕೀಲರ ಮೃತದೇಹ ಪತ್ತೆ; ವಾರಸುದಾರರ ಪತ್ತೆಗೆ ಪೊಲೀಸರಿಂದ ಕೋರಿಕೆ
ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.