ಜೂ. 30: ತುಳು ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
Team Udayavani, Jun 26, 2018, 9:57 AM IST
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಜೂ. 30ರಂದು ಮಧ್ಯಾಹ್ನ 2 ಗಂಟೆಗೆ ಅಕಾಡೆಮಿಯ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಾ| ಶಿಮಂತೂರು ನಾರಾಯಣ ಶೆಟ್ಟಿ (ತುಳು ಯಕ್ಷಗಾನ), ಸೇಸಪ್ಪ ಪಂಬದ (ಜಾನ ಪದ), ಶಕುಂತಳಾ ಭಟ್ (ಸಾಹಿತ್ಯ) ಅವರಿಗೆ ಗೌರವ ಪ್ರಶಸ್ತಿ ಪ್ರದಾನಿಸಲಾಗುವುದು. ಪುಸ್ತಕ ಬಹುಮಾನ ವಿಜೇತರಾದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ (ಅಧ್ಯಯನ ವಿಭಾಗ), ಚಂದ್ರಹಾಸ ಸುವರ್ಣ (ಕಥಾ ವಿಭಾಗ), ರೂಪಕಲಾ ಆಳ್ವ (ಕವನ ವಿಭಾಗ) ಅವರಿಗೆ ಬಹುಮಾನ ವಿತರಿಸಲಾಗುವುದು ಎಂದರು.
ಗೌರವ ಪ್ರಶಸ್ತಿಯು 50,000 ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಪುಸ್ತಕ ಬಹುಮಾನವು 25,000 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ತಿಳಿಸಿದರು.
ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಸದಸ್ಯರಾದ ಶಿವಾನಂದ ಕರ್ಕೇರ, ತಾರಾನಾಥ ಕಾಪಿಕಾಡ್ ಉಪಸ್ಥಿತರಿದ್ದರು.