Mangaluru; ಕಾನೂನು ಕೈಗೆತ್ತಿಕೊಂಡರೆ ಕ್ರಮ: ದಿನೇಶ್ ಗುಂಡೂರಾವ್
Team Udayavani, Feb 9, 2024, 11:38 PM IST
ಮಂಗಳೂರು: ಕಾನೂನು ಯಾರೇ ಕೈಗೆತ್ತಿಕೊಂಡರೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ. ನೈತಿಕ ಪೊಲೀಸ್ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾರ್ಯಕರ್ತರ ಸಭೆಗೆ ಆಗಮಿಸಿದ ವೇಳೆ ಮಾಧ್ಯಮವರೊಂದಿಗೆ ಮಾತನಾಡಿ, ಜಿಲ್ಲೆಗೆ ನೈತಿಕ ಪೊಲೀಸ್ಗಿರಿ ಕಳಂಕವಾಗಿದೆ. ಇದರಿಂದ ಹೊರ ಬರಬೇಕು. ಸುರಕ್ಷಿತ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.
ವಿಪಕ್ಷ ರಹಿತ ದೇಶ ಮಾಡಲು ಬಿಜೆಪಿ ಹೊರಟಿದೆ. ಏಕಪಕ್ಷೀಯ ದೇಶ ಮತ್ತು ಒಬ್ಬನೇ ನಾಯಕ ಇರಬೇಕು ಅಂದುಕೊಂಡಿದೆ. ಇಂತಹ ಪ್ರಜಾಪ್ರಭುತ್ವ ಈ ದೇಶಕ್ಕೆ ಒಳ್ಳೆಯದಲ್ಲ. ಈ ದೇಶದ ಸಮಸ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುವುದಿಲ್ಲ ಎಂದ ಅವರು, ಅನಂತ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್ಗೆ ದ್ವೇಷವೇ ಬಂಡವಾಳವಾಗಿದೆ ಎಂದು ಟೀಕಿಸಿದರು.
ಬಿಜೆಪಿ ಶಾಸಕ ಹರೀಶ್ ಪೂಂಜಾ “ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು’ ಅಭಿಯಾನಕ್ಕೆ ಕರೆ ನೀಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿ,ಅವರ ಉದ್ದೇಶ ಬೇರೆಯೇ ಇದೆ. ನಾವು ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎನ್ನುತ್ತಿದ್ದೇವೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದ್ದರೆ ಆ ಸತ್ಯಾಂಶವನ್ನು ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಅದನ್ನು ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಿದರೆ ಏನು ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಿಸಿ: ಸಚಿವ
ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಬೇಕು. ಜನ ವಂಚಿತರಾಗದಂತೆ ನೋಡಿಕೊಳ್ಳುವುದಲ್ಲದೇ ಪಕ್ಷ ಸಂಘಟನೆಗೆ ಬೂತ್ ಮಟ್ಟದಿಂದಲೇ ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯಬೇಕು. ಮೂರು ಬಾರಿ ಕಳೆದುಕೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಮರಳಿ ಪಡೆಯುವ ಗುರಿಯೊಂದಿಗೆ ಇಂದಿನಿಂದಲೇ ಕಾರ್ಯೋನ್ಮುಖವಾಗಬೇಕು. ಯಾವುದೇ ಗೊಂದಲಗಳಿಲ್ಲದೇ ಪಕ್ಷವೇ ಮುಖ್ಯ ಎಂಬ ಧ್ಯೇಯ ಹೊಂದಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಪ್ರಮುಖರಾದ ಜಿ.ಎ. ಬಾವಾ, ಇನಾಯತ್ ಅಲಿ, ಕೃಪಾ ಅಳ್ವಾ, ಮಮತಾ ಗಟ್ಟಿ, ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ದಾಸ್ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳ, ಅಧಿಕಾರಿಗಳು ಸಭೆ
ಮಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸಕೀìಟ್ ಹೌಸ್ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿ ಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು ಕ್ರಿಯಾತ್ಮಕವಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ çಮುಗಿಲನ್, ಜಿ.ಪಂ ಸಿಇಓ ಡಾ| ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.