ಇಂದು ಸ್ವಾತಂತ್ರ್ಯೋತ್ಸವ: ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
Team Udayavani, Aug 15, 2019, 5:03 AM IST
ಮಂಗಳೂರು/ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆ. 15ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ನೆಹರೂ ಮೈದಾನ ಮತ್ತು ಉಡುಪಿ ಬೀಡಿನಗುಡ್ಡೆ ಮೈದಾನದಲ್ಲಿ ನಡೆಯಲಿದೆ. ಈ ಬಾರಿ ಜಿಲ್ಲಾಧಿಕಾರಿಗಳಾದ ಶಶಿಕಾಂತ ಸೆಂಥಿಲ್ ಮತ್ತು ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ಮಾಡಲಿದ್ದಾರೆ.
ಯಡಿಯೂರಪ್ಪ ನೇತೃತ್ವದ ಸರಕಾರ ಇನ್ನೂ ಸಚಿವ ಸಂಪುಟ ರಚನೆ ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿ, ತಾಲೂಕುಗಳಲ್ಲಿ ತಹಶೀಲ್ದಾರ್ ಧ್ವಜಾರೋಹಣ ಮಾಡುವರು.
ಅಪರಾಹ್ನ 3.15ರಿಂದ ಮಂಗಳೂರು ಪುರಭವನದಲ್ಲಿ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ, ಬೆಳಗ್ಗೆ 8.20ಕ್ಕೆ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಮರ್ಪಣೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.