ದ.ಕ. ಜಿಲ್ಲೆಯ ಜನರಿಗೆ ಯಾವುದೇ ಆತಂಕ ಬೇಡ: ಸಚಿವ ಕೋಟ
Team Udayavani, May 4, 2021, 7:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸುದ್ದಿ ಮಾಧ್ಯಮದಲ್ಲಿ ಮಾಹಿತಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕರು ಮತ್ತು ಸಂಸದರೊಂದಿಗೆ ತುರ್ತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆಕ್ಸಿಜನ್ ಸ್ಥಿತಿಗತಿಯ ಬಗ್ಗೆ ವಿವರಿಸಿದರು. ಸದ್ಯ ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಪಾಲಕ್ಕಾಡ್ನಿಂದ 25 ಟನ್ ಆಕ್ಸಿಜನ್ ಸರಬರಾಜಾಗುತ್ತಿದ್ದು, ಈವರೆಗೆ ಸರಬರಾಜಿನ ಕೊರತೆಯಾಗಿಲ್ಲ. ಪಾಲಕ್ಕಾಡ್ನಿಂದ ಬರುವ ಸರಾಸರಿ 06 ಟನ್ ಆಕ್ಸಿಜನ್ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಮನವಿ ಮಾಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ವೆನ್ಲಾಕ್ನಲ್ಲಿ ಹೆಚ್ಚುವರಿ ವೆಂಟಿಲೇಟರ್ ಜೋಡಿಸಲು ತುರ್ತುಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹೊಸ ಆಕ್ಸಿಜನ್ ಉತ್ಪಾದನಾ ಘಟಕವೂ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಎದುರಿಸಲು ಕೈಗೊಂಡ ಕ್ರಮದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಹಾಗೂ ವೆನಾÉಕ್ ಆಸ್ಪತ್ರೆಯ ಅಧೀಕ್ಷಕರಾದ ಡಾ| ಸದಾಶಿವ ಶಾನುಭೋಗ್ ವಿವರಿಸಿದರು.
ಎಂತಹ ಕಠಿನ ಪರಿಸ್ಥಿತಿಯನ್ನು ಎದುರಿಸಲೂ ಜಿಲ್ಲಾಡಳಿತ ಸರ್ವ ತಯಾರಿರ ಬೇಕೆಂದು ಸಚಿವ ಕೋಟ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ಡಾ| ಭರತ್ ಶೆಟ್ಟಿ ವೈ., ವೇದವ್ಯಾಸ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.