ದ.ಕ. ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ
Team Udayavani, Aug 17, 2021, 6:40 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ (ಒಡಿಎಫ್ ಪ್ಲಸ್-1) ಜಿಲ್ಲೆ ಎಂದು ಘೋಷಿಸಲಾಗಿದೆ.
ರವಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಹಾಗೂ ಸ್ವತ್ಛ ಭಾರತ್ ಮಿಷನ್ನ ನೋಡಲ್ ಅಧಿಕಾರಿ ಕೆ. ಆನಂದ ಕುಮಾರ್ ಘೋಷಣಾ ಫಲಕ ಅನಾವರಣ ಮಾಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸ್ವತ್ಛ ಭಾರತ್, ಮಿಷನ್ (ಗ್ರಾ) ಆಯುಕ್ತರ ಸೂಚನೆಯಂತೆ ದ.ಕ. ಜಿಲ್ಲೆಯಲ್ಲಿ ವೈಯಕ್ತಿಕ ಗೃಹ ಶೌಚಾಲಯಗಳ ನಿರ್ಮಾಣ, ಹಾಗೂ ಘನತ್ಯಾಜ್ಯ ನಿರ್ವಹಣೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ಆಧಾರದ ಮೇಲೆ ಗ್ರಾಮ/ಗ್ರಾ.ಪಂ./ತಾಲೂಕು/ ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ (ಒಡಿಎಫ್ ಪ್ಲಸ್-1) ಎಂದು ಘೋಷಿಸಲಾಗಿದೆ ಎಂದು ಆನಂದ ಕುಮಾರ್ ತಿಳಿಸಿದರು.
ಜಿಲ್ಲೆಯ ಎಲ್ಲ ಗ್ರಾ.ಪಂ. ವ್ಯಾಪ್ತಿಯ ಕುಟುಂಬಗಳಿಗೆ ಶೌಚಾಲಯ ಸೌಲಭ್ಯ ಕಲ್ಪಿಸಿ ಶಾಲೆ ಮತ್ತು ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿ ಬಳಕೆ ಮಾಡಲಾಗುತ್ತಿದೆ. ಅವಶ್ಯವಿರುವ ಸ್ಥಳಗಳಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ನೀಡಲಾಗಿದ್ದು ಸೂಕ್ತವಾಗಿ ನಿರ್ವಹಣೆ ಮಾಡಲಾಗಿದೆ ಎಂದರು.
ತ್ಯಾಜ್ಯವೂ ಸಂಪನ್ಮೂಲ :
ಎಲ್ಲ ಗ್ರಾಮಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಲು ಪ್ರತೀ ಮನೆಗೆ ಕಸದ ಬುಟ್ಟಿಗಳನ್ನು ವಿತರಿಸಿದ್ದು, ಸ್ವತ್ಛ ವಾಹಿನಿ ಮೂಲಕ ತ್ಯಾಜ್ಯ ಸಂಗ್ರಹಣೆ ಮಾಡಿ ಸ್ವತ್ಛ ಸಂಕೀರ್ಣದಲ್ಲಿ ಶೇಖರಿಸಿ ಮರುಬಳಕೆ ಮೂಲಕ ಸಂಪನ್ಮೂಲವಾಗಿ ಮಾರ್ಪಡಿಸಲಾಗುತ್ತಿದೆ. ಇತರ ಕಸವನ್ನು ವೈಜ್ಞಾನಿಕ ವಿಲೇವಾರಿ ಮಾಡಲಾಗುತ್ತಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕನ್ನು ಸಂಪೂರ್ಣ ನಿಷೇಧಿಸುವ ಮೂಲಕ ಸ್ವತ್ಛ ಪರಿಸರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್., ಯೋಜನಾ ನಿರ್ದೇಶಕ ಎಚ್.ಆರ್. ನಾಯಕ್, ಜಿ.ಪಂ. ಅಧೀನ ಕಚೇರಿಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.