‘ಕಳೆದ ಬಾರಿಯ ಎಸೆಸೆಲ್ಸಿ ಫಲಿತಾಂಶ ಹಿನ್ನಡೆಗೆ ಪರಿಹಾರ ಕಂಡುಕೊಳ್ಳಿ’
Team Udayavani, Dec 30, 2018, 6:39 AM IST
ಮಹಾನಗರ: ಜಿಲ್ಲೆಯು ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದುಳಿಯಲು ಕಾರಣವೇನು ಎಂಬುದನ್ನು ಅರಿತು ಆ ನಿಟ್ಟಿನಲ್ಲಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಡಿ. 27 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾಕರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗಿರಿಜನ ಅಭಿವೃದ್ಧಿ ಯೋಜನೆ, ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆ ಪ್ರಸಕ್ತ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ಎದುರಿಸಲು ಸಜ್ಜಾಗುತ್ತಿರುವ ರೀತಿಯ ಬಗ್ಗೆ ಮಾಹಿತಿ ಪಡೆದ ಅವರು ಕೊನೆಯ ಮೂರು ತಿಂಗಳು ಮಕ್ಕಳನ್ನು ಪರೀಕ್ಷೆ ಬರೆಯಲು ಸಜ್ಜುಗೊಳಿಸುವುದರಿಂದ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು ಎಂದರು.
ಅಧಿಕಾರಿಗಳಿಂದ ಮಾಹಿತಿ
ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಡಿ ನಡೆಯುತ್ತಿರುವ ಹಾಸ್ಟೆಲ್ ಗಳ ಸುವ್ಯವಸ್ಥೆ ಮತ್ತು ಆಹಾರದ ಗುಣಮಟ್ಟದ ವರದಿ ಹಾಗೂ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಹಾಸ್ಟೆಲ್ ಗಳಲ್ಲಿರುವ ಮೂಲಸೌಕರ್ಯ ಹಾಗೂ ಆಹಾರ ಲಭ್ಯತೆ, ವಿದ್ಯಾರ್ಥಿಗಳ ಕಲಿಕಾ ಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಸ್ಟೆಲ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿಯೂ ಹೇಳಿದರು. ಆಹಾರ ಪೂರೈಕೆಗೆ ಟೆಂಡರ್ ಮಾಡುವ ರೀತಿ, ಈ ಸಂಬಂಧ ವಿಧಿಸಲಾದ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎನ್ನುವ ಬಗ್ಗೆ ಸಚಿವರು ಮಾಹಿತಿ ಪಡೆದರು.
ಬಯೋಮೆಟ್ರಿಕ್ ವ್ಯವಸ್ಥೆಗೆ ಚಿಂತನೆ
ಐಟಿಡಿಪಿ ಯೋಜನೆಯಡಿ ಜಿಲ್ಲೆಯ ಕೊರಗ ಸಮುದಾಯದವರಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿ, ಈ ಸಮುದಾಯಕ್ಕೆ ಪೌಷ್ಟಿಕ ಆಹಾರ ಪೂರೈಕೆ ಮಾಡುವ ವೇಳೆ ಸೌಲಭ್ಯ ಲಭ್ಯತೆ ಖಾತರಿ ಪಡಿಸಲು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸುವ ಬಗ್ಗೆ ಚಿಂತನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 1200 ಕೊರಗ ಸಮುದಾಯದ ಕುಟುಂಬಗಳಿದ್ದು ಅವರಿಗೆ 2,030 ರೂ. ಮೌಲ್ಯದ 14 ರೀತಿಯ ಆಹಾರ ಪದಾರ್ಥಗಳನ್ನು ತಿಂಗಳಿಗೆ ನೀಡಲಾಗುತ್ತಿದೆ ಎಂದು ಐಟಿಡಿಪಿ ಅಧಿಕಾರಿ ಹೇಮಲತಾ ಅವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ನಿರುದ್ಯೋಗ ಭತ್ತೆಗಳನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸೌಲಭ್ಯಕ್ಕೆ ಅರ್ಜಿ ಹಾಕಿದ ಎಲ್ಲರಿಗೂ ಸೌಲಭ್ಯ ನೀಡುವ ಮೊದಲು ನಿಜವಾದ ಅರ್ಹರಿಗೆ ಸೌಲಭ್ಯಗಳು ತಲುಪುತ್ತವೆಯೇ ಎನ್ನುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದರು.
ವಿವಿಧ ನಿಗಮಗಳಿಂದ ಫಲಾನುಭವಿಗಳ ಆಯ್ಕೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲ ಸಮಿತಿಗಳು ಜನವರಿ 15ರೊಳಗೆ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಲಮಿತಿ ಹಾಕಿ ಸಂಬಂಧ ಪಟ್ಟವರಿಗೆಲ್ಲರಿಗೂ ಪತ್ರ ಬರೆಯಿರಿ ಎಂದು ನಿಗಮದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಡಾ| ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಕುಮಾರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿವಿಧ ಸೌಲಭ್ಯಗಳ ಪ್ರಗತಿ ಪರಿಶೀಲನೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅರ್ಹರಿಗೆ ಸೌಲಭ್ಯಗಳನ್ನು ನೀಡಲಾಗಿದ್ದು, ಭಾಗ್ಯಲಕ್ಷ್ಮೀಬಾಂಡ್ ಬರುವಲ್ಲಿ ವಿಳಂಬವಾಗಿದ್ದರೂ ಗಾಬರಿಯಾಗಬೇಕಿಲ್ಲ ಎಂದು ಅಧಿಕಾರಿಗಳು ವಿವರಿಸಿದರು. ಉದ್ಯೋಗಿನಿ ಯೋಜನೆ ಸೇರಿದಂತೆ ವಿವಿಧ ಸೌಲಭ್ಯಗಳ ಪ್ರಗತಿ ಪರಿಶೀಲಿಸಿದರು. ಲೇಡಿಗೋಷನ್ ಮತ್ತು ವೆನ್ಲಾಕ್ ಆಸ್ಪತ್ರೆಗಳ ಅಗತ್ಯತೆಗಳನ್ನು ಆಲಿಸಿದ ಸಚಿವರು, ಆಸ್ಪತ್ರೆಗಳು ಇನ್ನಷ್ಟು ಉತ್ತಮವಾಗಿ ರೋಗಿಗಳಿಗೆ ಸೇವೆ ನೀಡುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಎಂದರು.
ಕೊರಗ ಸಮುದಾಯದ ಅಭಿವೃದಿಗೆ ಆದ್ಯತೆ
ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಾತನಾಡಿ, ಈಗಾಗಲೇ ಆರೋಗ್ಯ ಇಲಾಖೆಯನ್ನು ಒಳಗೊಂಡಂತೆ ವಿವಿಧ ಇಲಾಖೆಗಳ ಜತೆಗೂಡಿ ಕೊರಗ ಸಮುದಾಯಕ್ಕೆ ದೊರೆಯುವ ಸೌಲಭ್ಯಗಳನ್ನು ಅವರಿಗೆ ವಿತರಿಸಲಾಗುತ್ತಿದ್ದು ಸಾಕಷ್ಟು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ಹಂತದಲ್ಲಿ ಅವರಿಗೆ ಶಿಕ್ಷಣದ ಬಳಿಕ ಉದ್ಯೋಗ ನೀಡುವ ನಿಟ್ಟಿನಲ್ಲಿ ಸಬಲೀಕರಣಗೊಳಿಸಲು ಯೋಜನೆಗಳನ್ನು ರೂಪಿಸಲಾಗಿದೆ. ಐಟಿಡಿಪಿ ರಚನೆಯಾದ ಬಳಿಕ ಈ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.