“Mangaluru ಜಿಲ್ಲೆಯಲ್ಲಿ ಐಟಿ ಪಾರ್ಕ್, ಪ್ರವಾಸೋದ್ಯಮ ಅಭಿವೃದ್ಧಿ’
Team Udayavani, Nov 2, 2023, 12:14 AM IST
ಮಂಗಳೂರು: ದ.ಕ. ಜಿಲ್ಲೆ ಯಲ್ಲಿ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ, ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆ ದಾರರನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಪತ್ರಿಕಾಭವನದಲ್ಲಿ ಬುಧವಾರ “ಆರೋಗ್ಯ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಶಾಂತಿ ಸೃಷ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಕೆಲವರಿಂದಾಗಿ ಜಿಲ್ಲೆಗೆ ಕಪ್ಪು ಚುಕ್ಕೆಯಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.
ಜಿಲ್ಲಾಸ್ಪತ್ರೆ ಅಭಿವೃದ್ಧಿ
ವೆನ್ಲಾಕ್ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡು ಪರಿಹಾರ ಕ್ರಮ ಕೈಗೊಳ್ಳುತ್ತೇನೆ. ಅಗತ್ಯವಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸುವ ಜೊತೆಗೆ ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆಗಳನ್ನು ದುರಸ್ತಿಗೊಳಿಸಲಾಗುವುದು. ಪ್ರಾಥ ಮಿಕ ಆರೋಗ್ಯ ಕೇಂದ್ರಗಳಿಗೆ ಪ್ರಸ್ತುತ ಓರ್ವ ವೈದ್ಯರನ್ನಷ್ಟೇ ನಿಯುಕ್ತಿಗೊಳಿಸ ಲಾಗಿರುವ ಕಾರಣ ಆರೋಗ್ಯ ಕೇಂದ್ರದ ಸಮಯದಲ್ಲಿ ಬದಲಾವಣೆ ಮಾಡಲು ಆಸಾಧ್ಯವಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಬೇಡಿಕೆಗೆ ಅನುಗುಣವಾಗಿ ವೈದ್ಯರ ನಿಯುಕ್ತಿ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದರು.
ಕ್ರಿಕೆಟ್ ಮೈದಾನ
ಸುಸಜ್ಜಿತ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗುವುದು. ಫುಟ್ಬಾಲ್ಗೆ ಪ್ರೋತ್ಸಾಹ ನೀಡಲಾಗು ವುದು ಎಂದು ತಿಳಿಸಿದರು.
ಆಯುಷ್ಮಾನ್ ವಿಸ್ತರಣೆ
ಆಯುಷ್ಮಾನ್ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು. ಆಯುಷ್ಮಾನ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಬಡವರ್ಗಕ್ಕೆ ಸಂಪೂರ್ಣ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದೊಂದಿಗೆ ಈ ಯೋಜನೆ ಜಾರಿಯಲ್ಲಿದ್ದು ಮತ್ತಷ್ಟು ರೋಗಿಗಳಿಗೆ ತಲುಪಲು ಪ್ರಯತ್ನಿಸಲಾಗುವುದು ಎಂದರು.
ಪೂರ್ಣ ಅನುದಾನ ಬಳಕೆ
ಬ್ರ್ಯಾಂಡ್ ಮಂಗಳೂರು ಯೋಜನೆ ಮೂಲಕ ಪರಿಸರಕ್ಕೆ ಪೂರಕವಾಗುವ ಕೈಗಾರಿಕೆಗಳ ನಿರ್ಮಾಣ ಮಾಡ ಲಾಗುವುದು. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಉಳಿಕೆ ಕಾಮ ಗಾರಿಯನ್ನು ಪೂರ್ಣಗೊಳಿಸ ಲಾಗುವುದು. ಜಿಲ್ಲೆಗೆ ಬಂದಿರುವ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಆನಂದ್ ಶೆಟ್ಟಿ, ಮಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಟ್ರಸ್ಟ್ನ ಅಧ್ಯಕ್ಷ ರಾಮಕೃಷ್ಣ ರಾವ್, ಕಾರ್ಯಕ್ರಮ ಸಂಯೋಜಕ ಭಾಸ್ಕರ್ ರೈ ಕಟ್ಟ, ಪತ್ರಿಕಾ ಭವನ ಮಾಜಿ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ್ ವಂದಿಸಿದರು. ಚೇತನ್ ಶೆಟ್ಟಿ ನಿರೂಪಿಸಿದರು.