ತೆರಿಗೆ ಹೊರೆ ತಪ್ಪಿಸಲು ಕೇಂದ್ರ ಜತೆ ಮಾತುಕತೆ
Team Udayavani, Feb 27, 2020, 6:50 AM IST
ಬೆಳ್ತಂಗಡಿ/ ಮಂಗಳೂರು: ಸಹಕಾರ ಸಂಘ ಸಂಸ್ಥೆಗಳಿಗೆ ತೆರಿಗೆ ಹೊರೆ ತಪ್ಪಿಸುವ ಸಲುವಾಗಿ ಸಿಎಂ ಜತೆಗೆ ಸಮಾಲೋಚಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಲಾಗುವುದು ಎಂದು
ಸಹಕಾರ- ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಬೆಳ್ತಂಗಡಿ ಎಪಿಎಂಸಿ ಪ್ರಾಂಗಣದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆಗಾಗಿ ಬುಧವಾರ ಆಗಮಿಸಿದ್ದ ಸಚಿವ ಸೋಮಶೇಖರ್ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಚಾರ ತಿಳಿಸಿದರು. ಸಹಕಾರ ಸಂಸ್ಥೆ, ಬ್ಯಾಂಕುಗಳು ಎದುರಿಸುತ್ತಿರುವ ಸಮಸ್ಯೆ ನಿವಾರಣೆಗೆ ರಾಜ್ಯ ಮಟ್ಟದಲ್ಲಿ ಸಹಕಾರಿ ಬ್ಯಾಂಕ್ಗಳ ಅಧ್ಯಕ್ಷರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದರು.
ನೆರೆ ಪೀಡಿತ ರೈತರಿಗೆ ನೆರವು
ನೆರೆಪೀಡಿತ ಪ್ರದೇಶದ ರೈತರ ಅಲ್ಪಾವಧಿ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಮಾಡಿ ಬಡ್ಡಿ ಮನ್ನಾ ಮಾಡುವ ಕುರಿತು ಚಿಂತಿಸಲಾಗುವುದು. ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಗ್ರಾಮೀಣ ಭಾಗದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗುವುದು ಎಂದರು.
ರೈತರಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಹೊಸ ಯೋಜನೆ ರೂಪಿಸಲು ಚಿಂತಿಸಲಾಗುವುದು. ಸಹಕಾರ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರುವುದಕ್ಕಾಗಿ ಸಹಕಾರಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ಹಾಕಿಕೊಳ್ಳಲಾಗುವುದು ಎಂದು ಸಚಿವ ಸೋಮಶೇಖರ್ ವಿವರಿಸಿದರು.