ಡಿಸಿ ಕಚೇರಿಯಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ಪತ್ನಿ
Team Udayavani, Oct 14, 2022, 7:02 AM IST
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ದಿ| ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.
ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ನೇಮಕಾತಿ ಆದೇಶ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿದರು. ಸಿಎಂ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಳಿಸಲಾಯಿತು.
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕಕುಟುಂಬ ನಿರ್ವಹಣೆ ಹಿನ್ನೆಲೆಯಲ್ಲಿ ನೂತನ ಕುಮಾರಿ ಅವರಿಗೆ ಅನುಕಂಪದ ನೆಲೆಯಲ್ಲಿ ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಉದ್ಯೋಗ ಲಭಿಸಿತ್ತು. ಆದರೆ ಅವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಲು ಬಯಸಿದ್ದು, ಜಿಲ್ಲಾ ಬಿಜೆಪಿ ಶಾಸಕರ ಮನವಿಯಂತೆ ಮಂಗಳೂರಿನಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗಿದೆ.