ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್
Team Udayavani, May 26, 2022, 11:01 AM IST
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಪ್ರಥಮ ಬಾರಿಗೆ ಮಂಗಳೂರು ಆಗಮಿಸಿ, ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆಗೆ ಮೊದಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮಳಲಿ ಮಸೀದಿ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಆ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಮಂಗಳೂರು ಸೂಕ್ಷ್ಮ ಪ್ರದೇಶ. ಒಂದು ವರ್ಷದಲ್ಲಿ ಚುನಾವಣೆಯೂ ಇದೆ. ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್
ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವುದು ಅತೀ ಮುಖ್ಯವಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಮಂಗಳೂರು ಪೋಲಿಸರು ಅಗತ್ಯ ಕ್ರಮ ವಹಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜತೆಗೆ ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.
ಈ ವೇಳೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.