ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ನಿರ್ನಾಮ: ಯಡಿಯೂರಪ್ಪ
Team Udayavani, Apr 29, 2022, 11:00 PM IST
ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಜಗಳೂರಿನಲ್ಲಿ ಶುಕ್ರವಾರ ನಡೆದ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದ್ದು 2023ರ ಚುನಾವಣೆಯಲ್ಲಿ ಆ ಉಸಿರಾಟವೂ ನಿಲ್ಲಲಿದೆ ಎಂದರು.
ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ಸಿನವರಿಗೆ ತಮ್ಮ ನಾಯಕರು ಯಾರು ಎಂಬುದೇ ಗೊತ್ತಿಲ್ಲ. ತಬ್ಬಲಿಯಂತೆ ಅಲೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಉತ್ತರ ಪ್ರದೇಶದ ಒಟ್ಟು 403 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 339 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ. ಇದೇ ಪರಿಸ್ಥಿತಿ ರಾಜ್ಯದ ಕಾಂಗ್ರೆಸ್ಗೂ ಮುಂದಿನ ವಿಧಾನಸಭೆಯಲ್ಲಿ ಬರಲಿದೆ ಎಂದರು.
ಬಿಜೆಪಿ ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮಾಡಿ ಮಾದರಿ ರಾಜ್ಯವಾಗಿಸುವ ಸಂಕಲ್ಪ ಇಟ್ಟುಕೊಂಡಿದೆ. ಜಗಳೂರಿನಲ್ಲಿ ಎಸ್.ವಿ. ರಾಮಚಂದ್ರ ಅವರನ್ನು ಪ್ರತಿಸ್ಪರ್ಧಿ ಠೇವಣಿ ಕಳೆದುಕೊಳ್ಳುವ ರೀತಿಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.