ಮಕ್ಕಳ ಸಮಸ್ಯೆಗೆ ದನಿಯಾದ ಸಂವಾದ
ಯಾವುದೇ ಮಕ್ಕಳಿಗೆ ಹಾಸ್ಟೆಲ್ನಲ್ಲಿ ಪ್ರವೇಶ ನಿರಾಕರಿಸುವಂತಿಲ್ಲ
Team Udayavani, Jun 2, 2022, 2:34 PM IST
ದಾವಣಗೆರೆ: ನಗರದ ಡಯಟ್ನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಅಹವಾಲು ಆಲಿಕೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಬಂದ ಮಕ್ಕಳು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸಂಘಟಿಸಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆ, ಬೇಡಿಕೆ ಹೇಳಿಕೊಂಡರು.
ದಾವಣಗೆರೆ ನಗರದ ನಿಟುವಳ್ಳಿಯ ಅಜಯ್ ಮಾತನಾಡಿ, ತನ್ನ ತಂದೆ ತೀರಿ ಹೋಗಿದ್ದಾರೆ. ತಾಯಿ ಮನೆ ಕೆಲಸ ಮಾಡಿ ಸಾಕುತ್ತಿದ್ದು ಓದಲು ಆಸಕ್ತಿಯಿದೆ. ಆದ್ದರಿಂದ ಮೊರಾರ್ಜಿ ಶಾಲೆಯಲ್ಲಿ ಐದನೇ ತರಗತಿಗೆ ಪ್ರವೇಶ ಕೊಡಿಸಬೇಕು ಎಂದು ಕೇಳಿಕೊಂಡ.
ರಾಮಪ್ರಸನ್ನ ಎಂಬ ಯುವಕ ಮಾತನಾಡಿ, ದಾವಣಗೆರೆ ಬಾಲಕರ ಬಾಲ ಮಂದಿರದಲ್ಲಿ ಬೆಳೆದ ನನಗೆ 18 ವರ್ಷ ತುಂಬಿದ್ದರಿಂದ ಪದವಿ ಓದಲು ಬೆಳಗಾವಿಗೆ ಕಳುಹಿಸಿದ್ದಾರೆ. ದಾವಣಗೆರೆಯಲ್ಲಿಯೇ ಇರುವ ಹಾಸ್ಟೆಲ್ನಲ್ಲಿ ನನಗೆ ವಸತಿ ವ್ಯವಸ್ಥೆ ಮಾಡಿದರೆ ಇಲ್ಲಿಯೇ ಓದಿಕೊಳ್ಳುತ್ತೇನೆ ಎಂದು ಕೋರಿದ.
ದಾವಣಗೆರೆಯ ಬಾಲಕಿಯರ ಬಾಲಮಂದಿರದ ಪಲ್ಲವಿ ಎಂಬ ಬಾಲಕಿ ಮಾತನಾಡಿ, ಬಾಲಮಂದಿರದಿಂದ ಶಾಲೆ ದೂರವಿದ್ದು ನಡೆದುಕೊಂಡು ಹೋಗುವುದು ಕಷ್ಟವಾಗುತ್ತಿದೆ. ಸಾರಿಗೆ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದಳು. ಹೀಗೆ ಅನೇಕ ಮಕ್ಕಳು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಅಧಿಕಾರಿಗಳ ಎದುರು ಹೇಳಿಕೊಂಡರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಂಕರಪ್ಪ ಡಿ. ಅವರು ಮಕ್ಕಳ ಎಲ್ಲ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವುದು, ಮಕ್ಕಳನ್ನು ಎಲ್ಲ ರೀತಿಯಿಂದ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಯಾವುದೇ ಕಾರಣಕ್ಕೂ ಹಾಸ್ಟೆಲ್ ಭರ್ತಿಯಾಗಿದೆ, ಅವಕಾಶ ಇಲ್ಲ ಎನ್ನುವಂತಿಲ್ಲ. ಹಾಸ್ಟೆಲ್ ವ್ಯವಸ್ಥೆ ಕೇಳಿಕೊಂಡು ಬಂದವರಿಗೆಲ್ಲ ಯಾವುದಾದರೂ ಇಲಾಖೆಯ ಒಂದಿಲ್ಲೊಂದು ಹಾಸ್ಟೆಲ್ನಲ್ಲಿ ಪ್ರವೇಶ ನೀಡಬೇಕು. ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸುವಂತಿಲ್ಲ. ಅಲೆಮಾರಿ, ವಲಸೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲು ಸಹ ಇಲಾಖೆಯಲ್ಲಿ ಅವಕಾಶವಿದ್ದು ಅಲೆಮಾರಿ ಮಕ್ಕಳ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲೇಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಪ್ರವೀಣ ನಾಯಕ್ ಮಾತನಾಡಿ, ಇಂಥ ಕಾರ್ಯಕ್ರಮಗಳಿಂದ ಮಾತ್ರ ವಿದ್ಯಾರ್ಥಿಗಳ ವಾಸ್ತವಿಕ ಸಮಸ್ಯೆ ಅರಿವಿಗೆ ಬರುತ್ತದೆ. ವಿದ್ಯಾರ್ಥಿಗಳ ಸಮಸ್ಯೆ, ಬೇಡಿಕೆ ಅರಿತು ಅವುಗಳಿಗೆ ಶೀಘ್ರ ಸ್ಪಂದಿಸುವ ಕೆಲಸವಾದಾಗ ಮಾತ್ರ ಇಂಥ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಇತ್ತೀಚಿನ ದಿನಮಾನಗಳಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಅಂತಹ ಘಟನೆಗಳು ನಡೆಯದಂತೆ ಜಾಗ್ರತಿ ವಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ.
ಸಂವಿಧಾನದಲ್ಲಿ ತಿಳಿಸಿರುವಂತೆ ಶಿಕ್ಷಣ ಹಾಗೂ ಇನ್ನಿತರ ಮೂಲ ಸೌಲಭ್ಯಗಳು ಪ್ರತಿಯೊಬ್ಬ ಮಕ್ಕಳಿಗೂ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್, ಜಿಪಂ ಅಧಿಕಾರಿ ಶಾರದಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾ ನಾಯ್ಕ ವೈ., ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಮಿತ್ ಬಿದರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪೂರ್ಣಿಮಾ ಎಂ. ಇನ್ನಿತರರು ವೇದಿಕೆಯಲ್ಲಿದ್ದರು.
ಕೋವಿಡ್ನಿಂದ ಶಿಕ್ಷಣ ಇಲಾಖೆಗೆ ಹೆಚ್ಚು ಹಾನಿ
ಕೋವಿಡ್ನಿಂದ ಹೆಚ್ಚು ಸಮಸ್ಯೆಗೊಳಗಾದ ಇಲಾಖೆಯೆಂದರೆ ಅದು ಶಿಕ್ಷಣ ಇಲಾಖೆ. 18ತಿಂಗಳ ಕಾಲ ಮಕ್ಕಳು ಶೈಕ್ಷಣಿಕ ಚಟುವಟಿಕೆಯಿಂದ ದೂರ ಉಳಿಯುವಂತಾಯಿತು. ಏನೇ ಪರ್ಯಾಯ ಶಿಕ್ಷಣ ಕ್ರಮ ಕೈಗೊಂಡರೂ ಶೇಕಡಾ ನೂರರಷ್ಟು ಯಶಸ್ವಿಗೊಳಿಸಲು ಸಾಧ್ಯವಾಗಿಲ್ಲ. ಮಕ್ಕಳು ತಮ್ಮ ಸಮಸ್ಯೆ ಹೇಳಿಕೊಳ್ಳಲು ಈ ಕಾರ್ಯಕ್ರಮ ಉತ್ತಮ ವೇದಿಕೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಆರ್. ತಿಪ್ಪೇಶಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್