ಜಿಲ್ಲೆಯ ಅಭಿವೃದ್ಧಿಯತ್ತ ಮುಖ್ಯ ಮಂತ್ರಿಗಳು ಹರಿಸುವರೇ ಚಿತ್ತ
Team Udayavani, Sep 2, 2021, 5:47 PM IST
ರಾ. ರವಿಬಾಬು
ದಾವಣಗೆರೆ : ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗುರುವಾರ (ಸೆ. 2) ಪ್ರಥಮ ಬಾರಿಗೆ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿನ ಅಭಿವೃದ್ಧಿ ಕಾರ್ಯಗಳ ಘೋಷಣೆ ಮಾಡುವರೇ ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ಗರಿಗೆದರಿದೆ.
ನೆರೆಯ ಹಾವೇರಿ ಜಿಲ್ಲೆಯ ಶಿಗ್ಗಾಂವ ಕ್ಷೇತ್ರ ಪ್ರತಿನಿಧಿಸುತ್ತಿರುವ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಜನತಾ ಪರಿಹಾರದಲ್ಲಿದ್ದ ಸಂದರ್ಭದಲ್ಲಿ 1994ರಲ್ಲಿ ದಾವಣಗೆರೆಯಲ್ಲಿ ನಡೆದಿದ್ದ ದಶ ದಿಕ್ಕುಗಳಿಂದ ದಾವಣಗೆರೆ ಕಾರ್ಯಕ್ರಮವನ್ನ ಅಭೂತಪೂರ್ವವಾಗಿ ಸಂಘಟಿಸಿದ್ದರು.
ಮರು ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದಂತಹ ಜನತಾ ಪರಿಹಾರ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಬಸವರಾಜಬೊಮ್ಮಾಯಿಯವರ ತಂದೆ ಎಸ್.ಆರ್. ಬೊಮ್ಮಾಯಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಾವಣಗೆರೆಯ ಬಗ್ಗೆ ಅಪಾರ ಒಲವು ಹೊಂದಿರುವ ಬಸವರಾಜ ಬೊಮ್ಮಾಯಿ ಅವರಿಂದ ಜಿಲ್ಲೆ ಜನರು ಒಂದಷ್ಟು ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯಲ್ಲಿದ್ದಾರೆ.
ಮ್ಯಾಂಚೆಸ್ಟರ್ ಸಿಟಿಯಿಂದ ಆ್ಯಕ್ಸ್ ಫರ್ಡ್ ಸಿಟಿಯಾಗಿ ಬೆಳೆಯುತ್ತಿರುವ ದಾವಣಗೆರೆ ಮೆಡಿಕಲ್ ಹಬ್ ಎಂಬ ಖ್ಯಾತಿ ಹೊಂದಿದೆ. ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಗಬೇಕು ಎಂಬ ಬಹು ದಶಕಗಳ ಬೇಡಿಕೆಗೆ ಸ್ಪಂದಿಸಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಹಸಿರು ನಿಶಾನೆಯೇನೋ ನೀಡಿದೆ.
ಆದರೆ, ಸಾರ್ವಜನಿಕರಿಗೆ ಹೊರೆಯಾಗದ ರೀತಿ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂಬುದು ಸಾರ್ವಜನಿಕರ ಅಭಿಲಾಷೆ. ಮುಖ್ಯಮಂತ್ರಿಗಳು ಸರ್ಕಾರ ದಿಂದಲೇ ವೈದ್ಯಕೀಯ ಕಾಲೇಜು ಪ್ರಾರಂಭಿಸುವತ್ತ ಚಿತ್ತ ಹರಿಸುವರೇ ಎಂಬುದನ್ನ ಕಾದು ನೋಡುವಂತಾಗಿದೆ.
ಮೆಕ್ಕೆಜೋಳದ ಕಣಜ ಖ್ಯಾತಿಯ ದಾವಣಗೆರೆಯಲ್ಲಿ ಸಂಸ್ಕರಣಾ ಘಟಕ ಪ್ರಾರಂಭಿಸಬೇಕು ಎಂಬ ಅನ್ನದಾತರ ಒತ್ತಾಯ ದಶಕಗಳಿಂದ ಕೇಳಿ ಬರುತ್ತಲೇ ಇದೆ. ಯಾವುದೇ ಸರ್ಕಾರ ಈವರೆಗೂ ಮೆಕ್ಕೆಜೋಳ ಬೆಳೆಗಾರರ ಬೇಡಿಕೆಗೆ ಸ್ಪಂದಿಸುವತ್ತ ಕಾರ್ಯೋನ್ಮುಖವಾಗಿಲ್ಲ.
ರೈತರ ಬಗ್ಗೆ ಅಪಾರ ಕಾಳಜಿಯಿಂದ ಮಾತನಾಡುವ ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ, ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ನಾಡ ದೊರೆ ಬೇಡಿಕೆ ಈಡೇರಿಸಬಹುದೇ ಎಂಬ ಆಸೆ ಕೃಷಿಕರ ವಲಯದಲ್ಲಿದೆ. ಶಾಶ್ವತ ಬರಪೀಡಿತ ತಾಲೂಕು ಎಂಬ ಹಣೆಪಟ್ಟಿ ಹೊಂದಿರುವ ಜಗಳೂರು ತಾಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಆ ಭಾಗದ ರೈತಾಪಿ ವರ್ಗ ಹೊಲಗಳಿಗೆ ನೀರು ಕಾಣುವ ದಿನಗಳು ಹತ್ತಿರದಲ್ಲಿವೆ.
ಭದ್ರಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಾಗಿದೆ. ಅದಕ್ಕೆ ಪೂರಕ ವಾದ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕಾಗಿದೆ. ಮುಖ್ಯಮಂತ್ರಿಗಳು ಭದ್ರಾ ಮೇಲ್ದಂಡೆ ಯೋಜನೆ ಕುರಿತಾದ ಸರ್ಕಾರದ ನಿಲುವಿನ ಪ್ರಕಟಣೆ ಮಾಡಿಯಾರೇಎಂಬುದರನಿರೀಕ್ಷೆಯಲ್ಲಿ ಜಗಳೂರು ಜನರು, ರೈತರು, ಮುಖಂಡರು ಇದ್ದಾರೆ.
ವಿಮಾನ ನಿಲ್ದಾಣ, ಸ್ಮಾರ್ಟ್ಸಿಟಿ ಯೋಜನೆಗೆ ಚುರುಕು, ಪ್ರವಾಸೋದ್ಯಮ ಅಭಿವೃದ್ಧಿ, ಹರಿಹರ ಸಮೀಪ 2ಜಿ ಎಥೆನಾಲ್, ಯೂರಿಯ ಕಾರ್ಖಾನೆ, ಏತ ನೀರಾವರಿ ಯೋಜನೆ ಹೀಗೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳು ಕಾಯಕಲ್ಪದ ನಿರೀಕ್ಷೆಯಲ್ಲೇ ಇವೆ. ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣಕ್ಕೆ ಅಗತ್ಯವಾಗಿರುವ ಕಾರ್ಯಗಳಿಗೆ ಚಾಲನೆ ನೀಡುವರೇ ಎಂಬುದನ್ನ ಕಾದು ನೋಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್