ಧಾರವಾಡ : ಓರ್ವ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ; ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ
Team Udayavani, Mar 22, 2020, 9:00 AM IST
ಧಾರವಾಡ: ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ದಿನಾಂಕ 12-03-2020 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂ ಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , 18-03-2020 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದು ಬಂದಿದೆ.
ಇದರೊಂದಿಗೆ ಕರ್ನಾಟಕದಲ್ಲಿ 21 ನೇ ಸೋಂಕು ಪ್ರಕರಣ ದೃಢಪಟ್ಟಿದೆ.
ಹೊಸಯಲ್ಲಾಪುರ ಸುತ್ತಮುತ್ತ ಕಂಟೈನಮೆಂಟ್ ಪ್ರದೇಶ ಘೋಷಣೆ
ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.
ಈ ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing) ಸಂಗ್ರಹಿಸಲಾಗುತ್ತಿದೆ.
ಸಾಮಾಜಿಕ ಅಂತರ, ಶುಚಿತ್ವ ಪಾಲನೆಗೆ ಒತ್ತು ನೀಡಿ
ಜಿಲ್ಲೆಯಾದ್ಯಂತ ಈಗಾಗಲೇ ಕೋವಿಡ್ 19 ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.ಸಾರ್ವಜನಿಕರು ಸಾಧ್ಯವಾದಷ್ಟು ತಮ್ಮ ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.