ಸಂತ್ರಸ್ತರಿಗೆ ತಕ್ಷಣ ಸ್ಪಂದಿಸಲು-ಪರಿಹಾರ ಕೈಗೊಳ್ಳಲು ಸೂಚನೆ
•ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ•ಪರಿಹಾರ ಕ್ರಮ ಕೈಗೊಳ್ಳಲು ಅಗತ್ಯ ಸಾಧ್ಯತೆಯೊಂದಿಗೆ ಸಿದ್ಧರಿರಿ •ಸಹಾಯವಾಣಿ ಸಂಖ್ಯೆ, ತಂಡಗಳ ಕುರಿತು ಮಾಹಿತಿ ಪ್ರಚುರಪಡಿಸಿ
Team Udayavani, Aug 7, 2019, 9:16 AM IST
ಧಾರವಾಡ: ಜಿಲ್ಲೆಯಲ್ಲಿ ಬಹುವರ್ಷಗಳ ನಂತರ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಆದಲ್ಲಿ ಮಾಹಿತಿ ನೀಡಲು ಡಿಸಿ ಕಚೇರಿ ಹಾಗೂ ತಹಶೀಲ್ದಾರ್ಗಳ ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಇದರೊಂದಿಗೆ ಎಲ್ಲ ಹಂತದ ಅಧಿಕಾರಿಗಳು ಸಂತ್ರಸ್ತರಿಗೆ ತಕ್ಷಣ ಸ್ಪಂದಿಸಲು, ಪರಿಹಾರ ಕ್ರಮ ಕೈಗೊಳ್ಳಲು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಹಾಗೂ ಎಲ್ಲ ತಹಶೀಲ್ದಾರ್ ಗಳೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಮುಂಜಾಗ್ರತೆ ಕುರಿತು ತುರ್ತು ಸಭೆ ಕೈಗೊಂಡು ಅವರು ನಿರ್ದೇಶನ ನೀಡಿದರು.
ಎಲ್ಲಾ ಇಲಾಖೆಗಳ ಮುಖ್ಯಸ್ಥರು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ಪ್ರತಿ ಮೂರು ಗಂಟೆಗೊಮ್ಮೆ ಆಯಾ ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ಸಲ್ಲಿಸಬೇಕು. ಮುಂದಿನ 78 ಗಂಟೆವರೆಗೆ ಎಲ್ಲರೂ ಪರಿಹಾರ ಕ್ರಮ ಕೈಗೊಳ್ಳಲು ಅಗತ್ಯ ಸಾಧ್ಯತೆಯೊಂದಿಗೆ ಸಿದ್ಧರಿರಬೇಕು. ವಾಟ್ಸ್ ಆ್ಯಪ್, ಟೋಲ್ ಫ್ರೀ ದೂರವಾಣಿ ಮೂಲಕ ತಕ್ಷಣ ಮಾಹಿತಿ ಹಂಚಿಕೊಳ್ಳಬೇಕು. ಜಿಲ್ಲೆಯ ಯಾವುದೇ ಪ್ರದೇಶದಿಂದ ಸಮಸ್ಯೆ ಕೇಳಿ ಬಂದರೂ ತಕ್ಷಣ ಸ್ಪಂದಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದರು.
ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ, ಆರೋಗ್ಯ, ಕಂದಾಯ ಮತ್ತು ವಿದ್ಯುತ್ ಸರಬರಾಜು ಇಲಾಖೆಗಳ ಅಧಿಕಾರಿಗಳ ತಂಡ ರಚಿಸಬೇಕು. ಅಪಾಯದ ಸ್ಥಳದಲ್ಲಿರುವ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ನೆರವು ಆಗುವಂತೆ ಸಹಾಯವಾಣಿ ಸಂಖ್ಯೆ, ತಂಡಗಳ ಕುರಿತು ಮಾಹಿತಿ ಪ್ರಚುರ ಪಡಿಸಬೇಕು. ಅಗತ್ಯವಿರುವಲ್ಲಿ ತಕ್ಷಣದಿಂದಲೇ ತಾತ್ಕಾಲಿಕ ಪರಿಹಾರ ಕೇಂದ್ರ ಆರಂಭಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಏ.1 ರಿಂದ ಆ.6 ರವರೆಗೆ ಒಟ್ಟು 6 ಮಾನವ ಜೀವಹಾನಿಯಾಗಿದ್ದು, 30 ಲಕ್ಷ ಪರಿಹಾರ ವಿತರಿಸಲಾಗಿದೆ. ಒಟ್ಟು 13 ಜಾನುವಾರು ಹಾನಿಯಾಗಿದೆ. 1.5 ಲಕ್ಷ ಪರಿಹಾರ ನೀಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 355 ಮನೆಗಳಿಗೆ ಹಾನಿಯಾಗಿದ್ದು, ಅದರಲ್ಲಿ 225 ಮನೆಗಳಿಗೆ ಸಂಬಂಧಿಸಿದಂತೆ 16.10ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ. ಇನ್ನು 94 ಮನೆಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯಲಿದೆ. ಒಟ್ಟು ಇಲ್ಲಿಯವರೆಗೆ ಹೆಚ್ಚು ಮಳೆಯಿಂದ ಹಾನಿಯಾಗಿರುವ ಜನ-ಜಾನುವಾರು, ಮನೆಗಳಿಗೆ 47.15ಲಕ್ಷ ರೂ.ಮೊತ್ತದ ಪರಿಹಾರ ವಿತರಿಸಲಾಗಿದೆ ಎಂದರು.
ವಿದ್ಯಾರ್ಥಿ ವಸತಿ ನಿಲಯ, ಶಾಲೆ ಕಾಲೇಜು, ಆಸ್ಪತ್ರೆಗಳಲ್ಲಿ ಸೋರಿಕೆ, ಮಳೆ ನೀರು ಕಟ್ಟಡದಲ್ಲಿ ಬರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದ ಡಿಸಿ, ಸಮಾಜ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿಡಿಯೋ ಕಾನರೆನ್ಸ್ನಲ್ಲಿ ನವಲಗುಂದ ತಹಶೀಲ್ದಾರ್ ನವೀನ್ ಹುಲ್ಲೂರ ಮಾತನಾಡಿ, ತಾಲೂಕಿನಲ್ಲಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ತುಂಬಿ ಹರಿಯುತ್ತಿವೆ. ಈಗಾಗಲೇ ನಾಲಾ ಉದ್ದಕ್ಕೂ ಸ್ವಚ್ಛತೆ ಮಾಡಿರುವುದರಿಂದ ಯಾವುದೇ ಸಮಸ್ಯೆ ಆಗಿಲ್ಲ. ತಾಲೂಕಿನ ಬಹುತೇಕ ಕೆರೆಗಳು ಶೇ.70 ಭರ್ತಿಯಾಗಿವೆ. ಆರೆಕುರಹಟ್ಟಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಹಲವು ಮನೆಗಳು ಜಲಾವೃತವಾಗಿದ್ದು, ತಕ್ಷಣದಿಂದ ಅಲ್ಲಿಯ ನಿರಾಶ್ರಿತರಿಗೆ ಪುನರ್ವಸತಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕುಂದಗೋಳ ತಹಶೀಲ್ದಾರ್ ಬಸವರಾಜ ಮೆಳವಂಕಿ ಮಾತನಾಡಿ, ತಾಲೂಕಿನಲ್ಲಿ 89 ಮನೆಗಳಿಗೆ ಹಾನಿಯಾಗಿದ್ದು, ಬಹುತೇಕ ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಯರೇಬೂದಿಹಾಳ ಗ್ರಾಮದಲ್ಲಿ ಆಕಳು ಮತ್ತು ಕರು ಜೀವಹಾನಿಯಾಗಿದೆ. ಅಲ್ಲಾಪೂರ ಗ್ರಾಮದ ಕೆರೆ ಸಂಪೂರ್ಣ ತುಂಬಿದ್ದು, ಹೆಚ್ಚಿನ ನೀರು ಹಳ್ಳಕ್ಕೆ ಹೋಗಲು ಜೆಸಿಬಿ ಮೂಲಕ ದಾರಿ ಮಾಡಲಾಗಿದೆ. ಹುಬ್ಬಳ್ಳಿ, ಕಲಘಟಗಿ ಮತ್ತು ಕುಂದಗೋಳ ಜಮೀನುಗಳ ಹೆಚ್ಚುವರಿ ಮಳೆನೀರು ಯಲಿವಾಳ, ಇನಾಂಕೊಪ್ಪ ಹಾಗೂ ಬೂ. ಅರಳಿಕಟ್ಟಿ ಹತ್ತಿರದ ಸುಮಾರು 300 ಎಕರೆ ಕೃಷಿ ಭೂಮಿಯಲ್ಲಿ ಬಂದು ನಿಂತಿದೆ. ಈ ಕುರಿತು ರೈತರು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಶೀಘ್ರ ಸಮಸ್ಯೆ ಪರಿಹರಿಸಿ ನೀರು ಹೊರ ಹೋಗುವಂತೆ ಮಾಡಲಾಗುವುದು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ ಮಾತನಾಡಿ, ಅಳ್ನಾವರದ ಡೌಗಿ ನಾಲಾ ಮತ್ತು ಹುಲಿಕೇರಿ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹೊರ ಹೋಗಲು ಕ್ರಮ ಕೈಗೊಳ್ಳಲಾಗುತ್ತಿದೆ. ಹುಬ್ಬಳ್ಳಿ, ಕಲಘಟಗಿ ತಹಶೀಲ್ದಾರರು ಮಾತನಾಡಿದರು. ಎಸ್ಪಿ ಸಂಗೀತಾ ಜಿ. ಮಾತನಾಡಿ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳ ಪರಿಹಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತೊಂದರೆಗೀಡಾದ ಜನ-ಜಾನುವಾರು ಕುಟುಂಬಗಳ ಬಗ್ಗೆ ತಕ್ಷಣ ಮಾಹಿತಿ ನೀಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಆಹಾರ ಇಲಾಖೆಯ ಜಂಟಿನಿರ್ದೇಶಕ ಡಾ|ಸದಾಶಿವ ಮರ್ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ