ಖಾಸಗಿ ಆಸ್ಪತ್ರೆಗಳು ಬಂದ್
•ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ ವೈದ್ಯರ ಪ್ರತಿಭಟನೆ-ರೋಗಿಗಳ ಪರದಾಟ
Team Udayavani, Jun 18, 2019, 7:53 AM IST
ಗದಗ: ವೈದ್ಯರ ಮೇಲಿನ ದಾಳಿ ಖಂಡಿಸಿ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಯಿತು.
ಗದಗ: ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ದಾಳಿ ಖಂಡಿಸಿ ಐಎಂಎ ಕರೆ ಮೇರೆಗೆ ಜಿಲ್ಲೆಯಾದ್ಯಂತ ಸೋಮವಾರ ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿತು.
ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಗಳ ಮುಷ್ಕರದಿಂದಾಗಿ ಇಲ್ಲಿನ ಕೆಸಿ ರಾಣಿ ರಸ್ತೆ ಸೇರಿದಂತೆ ಅವಳಿ ನಗರದಲ್ಲಿರುವ ನೂರಾರು ಕ್ಲಿನಿಕ್ಗಳು, ಹತ್ತಾರು ನರ್ಸಿಂಗ್ ಹೋಂ ಬಾಗಿಲು ಮುಚ್ಚಿದ್ದವು. ಅದರೊಂದಿಗೆ ನಗರದ ವಿವಿಧ ಲ್ಯಾಬರೇಟರಿಗಳು, ಎಕ್ಸ್-ರೇ, ಸ್ಕಾನಿಂಗ್ ಸೆಂಟರ್ಗಳನ್ನು ಬಂದ್ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿತ್ತು.
ವೈದ್ಯರ ಮುಷ್ಕರದ ಬಗ್ಗೆ ಅರಿಯದೇ ಬಂದಿದ್ದ ರೋಗಿಗಳಿಗೆ ಕೆಲಕಾಲ ಪರದಾಡುವಂತಾಯಿತು. ಹೊರ ರೋಗಿ ವಿಭಾಗದಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ, ರೋಗಿಗಳು ಸಹಕರಿಸಬೇಕು ಎಂದು ನಗರದ ಬಹುತೇಕ ಎಲ್ಲ ಆಸ್ಪತ್ರೆಗಳ ಮುಖ್ಯದ್ವಾರದಲ್ಲಿ ನೋಟಿಸ್ ಬೋರ್ಡ್ ಅಳವಡಿಸಲಾಗಿತ್ತು. ಆದರೂ ಕೆಲ ತುರ್ತು ಪ್ರಕರಣಗಳಿಗೆ ಸ್ಪಂದಿಸಿದ ವೈದ್ಯರು, ರೋಗಿಗಳಿಗೆ ಚಿಕಿತ್ಸೆ ನೀಡಿದರು.
ನಗರದಲ್ಲಿ ವೈದ್ಯರ ಪ್ರತಿಭಟನೆ: ಕೋಲ್ಕತ್ತಾದಲ್ಲಿ ಖಾಸಗಿ ಆಸ್ಪತ್ರೆಯ ಕಿರಿಯ ವೈದ್ಯರೊಬ್ಬರ ಮೇಲೆ ಮೃತ ರೋಗಿಯ ಸಂಬಂಧಿಕರು ದಾಳಿ ನಡೆಸಿರುವುದನ್ನು ಖಂಡಿಸಿ ಇಲ್ಲಿನ ಜಿಮ್ಸ್ ಆಸ್ಪತ್ರೆ ಎದುರು ವೈದ್ಯರು ಪ್ರತಿಭಟನೆ ನಡೆಸಿದರು.
ಬಳಿಕ ಐಎಂಎ ನೇತೃತ್ವದಲ್ಲಿ ಜಿಮ್ಸ್ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಜಿಮ್ಸ್ ಆಸ್ಪತ್ರೆಯಿಂದ ಮುಳಗುಂದ ನಾಕಾ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ, ಇತ್ತೀಚಿನ ದಿನಗಳಲ್ಲಿ ಖಾಸಗಿ ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲಿನ ದಾಳಿಗಳು ಹೆಚ್ಚುತ್ತಿದ್ದು, ವೈದ್ಯರು ಭಯದ ವಾತಾವರಣದಲ್ಲೇ ಸೇವೆ ಸಲ್ಲಿಸುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ಹಿರಿಯ ನಾಗರಿಕರೊಬ್ಬರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಆದರೆ, ರೋಗಿಯ ಸಂಬಂಧಿಕರು ವಿನಾಕಾರಣ ವೈದ್ಯರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಗಲಾಟೆ ಮಾಡಿದ್ದಾರೆ. ಅಲ್ಲದೇ, 200ಕ್ಕೂ ಹೆಚ್ಚು ಜನರ ಗುಂಪು ಕರೆತಂದು ಕಿರಿಯ ವೈದ್ಯ ಹಾಗೂ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿ ನಡೆಯುವ ಬಗ್ಗೆ ಪೊಲೀಸರಿಗೆ ಮುನ್ಸೂಚನೆ ನಿಡಿದ್ದರೂ ಅಗತ್ಯ ಭದ್ರತೆ ಕಲ್ಪಿಸದಿರುವುದೇ ಈ ಘಟನೆಗೆ ಕಾರಣ ಎಂದು ಆರೋಪಿಸಿದರು. ಐಎಂಎ ಕರ್ಣಾಟಕ ರಾಜ್ಯಾಧ್ಯಕ್ಷ ಡಾ| ಅನ್ನದಾನ ಮೇಟಿ, ಗದಗ ಐಎಂಎ ಅಧ್ಯಕ್ಷ ಡಾ| ಧನೇಶ್ ದೇಸಾಯಿ, ಕಾರ್ಯದರ್ಶಿ ಶರಣು ಆಲೂರು, ಮಾಜಿ ರಾಜ್ಯಾಧ್ಯಕ್ಷ ಡಾ|ಜಿ.ಬಿ. ಬಿಡ್ನಾಳ, ಡಾ| ರಾಜಶೇಖರ ಬಳ್ಳಾರಿ, ಡಾ| ಬಿ.ಎಂ. ಆಲೂರು, ಡಾ| ಆರ್.ಎನ್.ಪಾಟೀಲ, ಅಲೋಪತಿಕ್ ಹಾಗೂ ಆಯುಷ್ ವೈದ್ಯರು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ