ಸಮರ್ಪಕ ಬಿತ್ತನೆ ಬೀಜ-ಗೊಬ್ಬರ ಪೂರೈಸಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ನಿರ್ದೇಶನ
Team Udayavani, Jul 1, 2022, 3:50 PM IST
ಮುಂಡರಗಿ: ಮುಂಗಾರು ಹಂಗಾಮಿನ ಬಿತ್ತನೆ ಆರಂಭವಾಗಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಅನಧಿಕೃತ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಂಗ್ರಹ ಮಾಡದಂತೆ ನಿರಂತರ ನಿಗಾ ಇಡಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪರಿಕರಗಳ ಮಾರಾಟ ಕೇಂದ್ರಗಳಿಗೆ ಅಧಿಕಾರಿ ಗಳು ಭೇಟಿ ನೀಡಿ ನಿಯಮಾನುಸಾರ ವಿತರಣೆಯಾಗುವ ಕುರಿತು ಪರಿಶೀಲಿಸುವಂತೆ ಸೂಚಿಸಿದರು.
ಅತಿವೃಷ್ಟಿಯಿಂದ ಬೆಳೆ ಹಾನಿಯಾದಲ್ಲಿ ತಕ್ಷಣವೇ ನಿಖರವಾಗಿ ಜಂಟಿ ಸಮೀಕ್ಷೆ ಕೈಗೊಂಡು ಪರಿಹಾರ ಒದಗಿಸಲು ಇಲಾಖಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಜನ-ಜಾನುವಾರುಗಳ ಜೀವಕ್ಕೆ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅತಿವೃಷ್ಟಿ ನಿರ್ವಹಣೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯನಿರ್ವಹಿಸಬೇಕು. ತಾಲೂಕು ಆಡಳಿತಗಳು ನಿಯಮಿತವಾಗಿ ಟಾಸ್ಕ್ಫೋರ್ಸ್ ಸಮಿತಿ ಸಭೆ ಜರುಗಿಬೇಕು. ಅತಿವೃಷ್ಟಿಯಿಂದಾಗಿ ಜನ-ಜಾನುವಾರುಗಳ ಜೀವ ಹಾನಿಯಾದಲ್ಲಿ ತಾಲೂಕು ಆಡಳಿತ ತಕ್ಷಣವೇ ಸ್ಪಂದಿಸಿ, ಇಪ್ಪತ್ತನಾಲ್ಕು ಗಂಟೆಯೊಳಗಾಗಿ ಜೀವ ಹಾನಿ ಸಂಭವಿಸಿದ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಬೇಕು. ಈ ಕಾರ್ಯದಲ್ಲಿ ವಿಳಂಬ ನೀತಿ ಸಹಿಸಲಾಗದು ಎಂದು ಎಚ್ಚರಿಕೆ ನೀಡಿದರು.
ಮಳೆಯಿಂದಾಗಿ ನೆರೆಗೆ ತುತ್ತಾದ ಗ್ರಾಮಗಳ ಸಾರ್ವಜನಿಕರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ರಕ್ಷಣಾ ತಂಡಗಳು ಕ್ಷಿಪ್ರ ಕಾರ್ಯಾಚರಣೆಗೆ ಮುಂದಾಗಬೇಕು. ಜನ ಜಾನುವಾರುಗಳ ಜೀವಹಾನಿ ತಪ್ಪಿಸಲು ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅತಿವೃಷ್ಟಿ ಪರಿಸ್ಥಿತಿಗೆ ಅನುಸಾರ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಆರೋಗ್ಯ ತಪಾಸಣೆ ಹಾಗೂ ಅಗತ್ಯದ ಔಷಧಗಳು ಲಭ್ಯವಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ತಾಲೂಕಿನ ಜಮಾಬಂದಿ ಕಾರ್ಯ ನಿರ್ವಹಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಕಂದಾಯ ಇಲಾಖೆಯ ಆಧಾರಸ್ತಂಭಗಳಾಗಿ ಕಾರ್ಯನಿರ್ವಹಿಸುತ್ತಾರೆ. ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇಲಾಖೆಗೆ ಹೆಸರು ತರಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭ ಹೆಚ್ಚಾಗಿರುತ್ತದೆ. ಕೆಲಸದ ಒತ್ತಡದಿಂದ ಹೊರಬರಲು ನಿಯಮಿತವಾಗಿ ವ್ಯಾಯಾಮ ಹಾಗೂ ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಒತ್ತಡದ ಕೆಲಸವನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ಎಂ. ಸುಂದರೇಶಬಾಬು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಆಶಪ್ಪ ಪೂಜಾರ ಮಾತನಾಡಿ, ಜಿಲ್ಲಾಧಿಕಾರಿಗಳ ಸೂಚನೆಯನ್ನು ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಚಾಚೂ ತಪ್ಪದೇ ಕಾರ್ಯರೂಪಕ್ಕೆ ತರಬೇಕು. ಅತಿವೃಷ್ಟಿ ನಿರ್ವಹಣೆಯಲ್ಲಿ ನಿಧಾನಗತಿ ಬೇಡ. ಸಾರ್ವಜನಿಕರಿಗೆ ತಕ್ಷಣವೇ ಸ್ಪಂದಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕೆಂದರು.
ಸಭೆಯಲ್ಲಿ ಉದಯಕುಮಾರ ಎಲಿವಾಳ, ರಂಜಿತಾ ತಳಗೇರಿ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಜೀವ ಹಾನಿಯಾಗದಂತೆ ನಿಗಾ ವಹಿಸಿ ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ಮಳೆಯಿಂದ ಜನ-ಜಾನುವಾರುಗಳ ಜೀವಕ್ಕೆ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅನಧಿಕೃತ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಂಗ್ರಹ ಮಾಡದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ