ಪರಿಶಿಷ್ಟರಿಗೆ ಶೀಘ್ರ ಸೌಲಭ್ಯ ಕಲ್ಪಿಸಲು ಶ್ರಮಿಸಿ
ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ
Team Udayavani, May 27, 2022, 2:09 PM IST
ಗದಗ: ಪ.ಜಾ., ಪ.ಪಂ. ಉಪ ಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ಶೀಘ್ರಗತಿಯಲ್ಲಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ.ಜಾ., ಪ.ಪಂ. ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಯಡಿ ಬಿಡುಗಡೆಯಾಗುವ ಅನುದಾನ ದುರುಪಯೋಗವಾಗದಂತೆ ನಿಗಾ ವಹಿಸಬೇಕು. ನಿಗದಿತ ಕಾಲ ಮಿತಿಯಲ್ಲಿಯೇ ಕಾಮಗಾರಿ ಟೆಂಡರ್ ಕರೆದು, ಪೂರ್ಣಗೊಳಿಸುವ ಮೂಲಕ ಅನುದಾನ ಸರಕಾರಕ್ಕೆ ವಾಪಸ್ಸಾಗದಂತೆ ಕ್ರಮ ವಹಿಸಬೇಕು. ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ಅಪ್ ಡೇಟ್ ಮಾಡಬೇಕೆಂದು ಆದೇಶಿಸಿದರು.
ಜಿಪಂ ಸಿಇಒ ಡಾ.ಸುಶೀಲಾ ಬಿ. ಮಾತನಾಡಿ, ಎಸ್ಸಿ, ಎಸ್ಟಿ ಯೋಜನೆಗಳಡಿ ಪರಿಶಿಷ್ಟ ಜನರು ವಾಸವಿರುವ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅವು ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕೆಂದು ನಿರ್ದೇಶಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ(ಎಸ್ಸಿಎಸ್ಪಿ) ಯೋಜನೆಯಡಿ, ಏಪ್ರಿಲ್ 30ರ ಅಂತ್ಯದವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ 2003.84 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಆ ಪೈಕಿ 771.29 ಲಕ್ಷ ರೂ. ಖರ್ಚಾಗಿದೆ. 195 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು, ಶೇ.38 ರಷ್ಟು ಪ್ರಗತಿಯಾಗಿದೆ. ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ 640.74 ಲಕ್ಷ ರೂ. ಬಿಡುಗಡೆಯಾಗಿದ್ದು, ಆ ಪೈಕಿ 332.45 ಲಕ್ಷ ರೂ. ಖರ್ಚಾಗಿದೆ. 34 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು, ಶೇ. 52 ರಷ್ಟು ಪ್ರಗತಿಯಾಗಿದೆ ಎಂದು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಉಪ ಹಂಚಿಕೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್ಪಿ) ಯೋಜನೆಯಡಿ ಕೃಷಿ , ವಿಕಲಚೇತನ, ಆಯುಷ್, ಲೋಕೋಪಯೋಗಿ, ಯುವ ಸಬಲೀಕರಣ ಮತ್ತು ಕ್ರೀಡಾ, ಸಾರ್ವಜನಿಕ ಶಿಕ್ಷಣ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಜರುಗಿತು. ಇದೇ ವೇಳೆ ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿಯೇ ಸ್ವೀಕರಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ, ಸಕಾಲ ಯೋಜನೆಯಡಿ ಪ್ರಗತಿ ಸಾಧಿಸಲು ಸಂಬಂಧಿತ ಇಲಾಖೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು. ಅರ್ಜಿ ವಿಲೇವಾರಿಗೆ ವಿನಾಕಾರಣ ವಿಳಂಬ ಮಾಡಬಾರದು ಎಂದು ಸೂಚಿಸಿದರು.
ಜೀತ ಪದ್ಧತಿ ನಿಷೇಧ: ಸರಕಾರ ಈಗಾಗಲೇ ಜೀತ ಪದ್ಧತಿಯನ್ನು ನಿಷೇಧಿಸಿದ್ದು, ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಸಮಿತಿ ಕಾರ್ಯಪ್ರವೃತ್ತವಾಗಬೇಕು. ಜೀತ ಪದ್ಧತಿಯಿಂದ ಬಿಡುಗಡೆಯಾದ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ವಸತಿ, ವಿದ್ಯಾಭ್ಯಾಸ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಪಂ ಸಿಇಒ ಡಾ|ಸುಶೀಲಾ ಬಿ. ಮಾತನಾಡಿ, ಜೀತದಾಳುಗಳನ್ನು ಗುರುತಿಸಿದ ನಂತರ ಅವರಿಗೆ ಶಿಕ್ಷಣ, ವಸತಿ ಹಾಗೂ ವೈದ್ಯಕೀಯ ವೆಚ್ಚ ಹೀಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ನಿರುಪಯುಕ್ತ ವಾಹನಗಳ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ., ತೋಟಗಾರಿಕೆ ಉಪನಿರ್ದೇಶಕ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ