ನಕಲಿ ವೈದ್ಯರ ಪತ್ತೆಗೆ ಹಿಂದೇಟು-ತರಾಟೆ
ಜನರ ಜೀವದೊಂದಿಗೆ ನಕಲಿ ವೈದ್ಯರ ಚೆಲ್ಲಾಟ•ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಅಸಮಾಧಾನ
Team Udayavani, Jul 4, 2019, 12:49 PM IST
ಗದಗ: ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಅಧ್ಯಕ್ಷತೆಯಲ್ಲಿ ಬುಧವಾರ ಜಿಪಂ ಮಾಸಿಕ ಸಾಮಾನ್ಯ ಸಭೆ ಜರುಗಿತು.
ಗದಗ: ಜಿಲ್ಲೆಯಲ್ಲಿ ಬೇರೂರಿರುವ ನಕಲಿ ವೈದ್ಯರನ್ನು ಪತ್ತೆ ಮಾಡುವುದು ಹಾಗೂ ಅವರ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿರುವುದು ಸರಿಯಲ್ಲ ಎಂದು ಜಿಪಂ ಸಿಇಒ ಮಂಜುನಾಥ ಚವ್ಹಾಣ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಇಲಾಖೆ ಕುರಿತು ಚರ್ಚೆಯಲ್ಲಿ ನಕಲಿ ವೈದ್ಯರ ಬಗ್ಗೆ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ವಿಷಯ ಪ್ರಸ್ತಾಪಿಸಿದರು. ಪ್ರತಿ ಗ್ರಾಮದಲ್ಲಿ ಮೂರ್ನಾಲ್ಕು ಜನ ನಕಲಿ ವೈದ್ಯರಿದ್ದು, ಜನರ ಜೀವದೊಂದಿಗೆ ಚೆಲ್ಲಾಟ ವಾಡುತ್ತಿದ್ದಾರೆ. ಈ ಬಗ್ಗೆ ಕಳೆದ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರೂ, ಯಾವ ಕ್ರಮಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು.
ಆಯುಷ್ ಇಲಾಖೆಯಿಂದ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು. ಆ ಸಮಿತಿಯಲ್ಲಿ ತಾವು ಇಲ್ಲ ಎನ್ನುವುದರೊಂದಿಗೆ ಆಸ್ಪತ್ರೆಗಳ ಕಾಮಗಾರಿ ಪ್ರಗತಿ ವಿವರಿಸಿ, ವಿಷಯಾಂತರಿಸಲು ಮುಂದಾದ ಡಿಎಚ್ಒ ವಿರುಪಾಕ್ಷರೆಡ್ಡಿ ಮಾದಿನೂರ ಅವರನ್ನು ಮಂಜುನಾಥ ಚವ್ಹಾಣ ತರಾಟೆಗೆ ತೆಗೆದುಕೊಂಡರು.
ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದೇ, ಏನೇನೋ ಕಥೆ ಹೇಳಬೇಡಿ. ಡಿಎಚ್ಒ ಹಾಗೂ ಆಯುಷ್ ಅಧಿಕಾರಿಗಳು ಜಂಟಿಯಾಗಿ ನಕಲಿ ವೈದ್ಯರ ವಿರುದ್ಧ ದಾಳಿ ನಡೆಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಲಾಗಿದೆ. ಈ ಬಗ್ಗೆ ಅನುಷ್ಠಾನದ ಮಾಹಿತಿಯೇ ನೀಡಿಲ್ಲವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಆಯುಷ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಂತಹ ವೈದ್ಯರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಜಿಪಂ ಅಧ್ಯಕ್ಷ ಎಸ್.ಪಿ.ಬಳಿಗಾರ ನಿರ್ದೇಶಿಸಿದರು.
ಕೃಷಿ ಇಲಾಖೆಗೆ ಸಂಬಂಧಿಸಿದ ಚರ್ಚೆಯಲ್ಲಿ ರೈತರ ಪಹಣಿ ಪತ್ರಿಕೆಗಳಲ್ಲಿ ನೀರಾವರಿ ಎಂದು ತಪ್ಪಾಗಿ ನಮೂದಾಗಿದ್ದು, ಅರ್ಹ ರೈತರಿಗೆ ಸರಕಾರದ ಸೌಲಭ್ಯಗಳು ದೊರಕುತ್ತಿಲ್ಲ ಎಂಬ ದೂರುಗಳಿವೆ. ಈ ಕುರಿತು ಪರಿಶೀಲಿಸಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಬಾಲರೆಡ್ಡಿ ಸಭೆಗೆ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಪಹಣಿಯಲ್ಲಿ ಆಗಿರುವ ಲೋಪದ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ಜರುಗಿಸಿ, ರೈತರಿಗೆ ಬೆಳೆ ಪರಿಹಾರ, ಬೆಳೆಹಾನಿ ಸೌಲಭ್ಯ ದೊರಕಿಸುವಂತೆ ಮಾಡಬೇಕು. ಜಿಲ್ಲೆಯ ವಿವಿಧೆಡೆ ಹದಗೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ದುರಸ್ತಿ ಹಾಗೂ ಅಗತ್ಯವಿರುವೆಡೆ ಸ್ಥಳಾಂತರಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 28 ಮೇವು ಬ್ಯಾಂಕುಗಳನ್ನು ತೆರೆಯಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಗಂಟಲು ಬೇನೆ, ಕಾಲುಬಾಯಿ ರೋಗ ಹರಡದಂತೆ 6 ತಿಂಗಳಿಗೊಮ್ಮೆ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ಪಾಲನಾ ಹಾಗೂ ಪಶು ವೈದ್ಯ ಸೇವೆ ಇಲಾಖೆಯ ಉಪನಿರ್ದೇಶಕರು ಸಭೆಗೆ ತಿಳಿಸಿದರು. ಪಶು ವೈದ್ಯಾಧಿಕಾರಿಗಳು ಲಸಿಕಾ ಕಾರ್ಯಕ್ರಮ, ಜಾನುವಾರುಗಳಿಗೆ ಔಷಧಿ ವಿತರಣೆಯನ್ನು ಆಯಾ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಪದೇ-ಪದೇ ಪಿಡಿಒಗಳನ್ನು ವರ್ಗಾಹಿಸಬಾರದು ಎಂದು ಜಿಪಂ ಸದಸ್ಯೆ ಮಂಜುಳಾ ಹುಲ್ಲಣ್ಣವರ ಆಗ್ರಹಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಸೊರಟೂರ ಗ್ರಾಮದ ಪರಿಶಿಷ್ಟರ ಕಾಲೋನಿಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸುವ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದರು.
ವಿವಿಧ ಇಲಾಖೆಗಳ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಉಪ ಕಾರ್ಯದರ್ಶಿ ಡಿ.ಪ್ರಾಣೇಶ ರಾವ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷ ಈರಪ್ಪ ಈಶ್ವರಪ್ಪ ನಾಡಗೌಡ್ರ, ಜಿ.ಪಂ. ಸದಸ್ಯರು, ಜಿಪಂ ಯೋಜನಾ ನಿರ್ದೇಶಕ ಟಿ.ದಿನೇಶ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು