ಸಿಎಂ ಕಾರ್ಯಕ್ರಮ: ಸ್ಥಳ ಪರಿಶೀಲಿಸಿದ ರೇವಣ್ಣ
Team Udayavani, Feb 14, 2019, 10:59 AM IST
ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಫೆ.15,16 ಹಾಗೂ 18 ರಂದು ಹಾಸನ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.
ಅಧಿಕಾರಿಗಳ ತುರ್ತು ಸಭೆ: ಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾ ಬೆಳಗ್ಗೆ ತುರ್ತಾಗಿ ಅಧಿಕಾರಿಗಳ ಸಭೆ ನಡೆಸಿದ ಸಚಿವ ರೇವಣ್ಣ ಅವರು, ಫೆ. 15 ಮತ್ತು 16 ರಂದು ನಡೆಯುವ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಯವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು. ಫೆ. 15ರಂದು ಮಧ್ಯಾಹ್ನ 2.30ಕ್ಕೆ ಚನ್ನರಾಯಪಟ್ಟಣ ತಾಲೂಕು ಬರಗೂರು ಹ್ಯಾಂಡ್ ಪೋಸ್ಟ್ನಲ್ಲಿ ಆಲಗೊಂಡನಹಳ್ಳಿ ಏತನೀರಾವರಿ ಹಾಗೂ ವಿವಿಧ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವರು. 4.30ಕ್ಕೆ ದುದ್ದದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಂತಿಗ್ರಾಮ, ದುದ್ದ ಹೋಬಳಿಗಳ ಕೆರೆ ತುಂಬಿಸುವ ಯೋಜನೆ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ವಿವಿಧ ಕಾಮಗಾರಿಗಳಿಗೆ ಚಾಲನೆ: ಫೆ. 15ರಂದು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯ 450 ಹಾಸಿಗೆಗಳ ಆಸ್ಪತ್ರೆಯ ಕಟ್ಟಡದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದು ಫೆ. 16 ರಂದು ಸಕಲೇಶಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಸಲಿದ್ದಾರೆ ಎಂದರು.
ಫೆ. 16 ರಂದು ಆರೋಗ್ಯ ಮೇಳ ಹಾಗೂ 17 ರಂದು ಕೃಷಿ ಮೇಳ ಮತ್ತು ಫೆ. 18 ರಂದು ಮಹಿಳಾ ಮೇಳ ನಡೆಯಲಿದೆ. ಆರೋಗ್ಯ ಮೇಳಕ್ಕೆ ಪ್ರತಿಯೊಂದು ಗ್ರಾಮಪಂಚಾ ಯಿತಿಯಿಂದ ಕನಿಷ್ಠ 100 ಮಂದಿಯನ್ನು ಕರೆತರುವ ವ್ಯವಸ್ಥೆ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ ಒದಗಿಸುತ್ತಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಲೆಕ್ಕಿಗರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರನ್ನು ಆರೋಗ್ಯ ಮೇಳಕ್ಕೆ ಕರೆ ತರಬೇಕು ಎಂದು ಸೂಚಿಸಿದರು.
500ಕ್ಕೂ ಅಧಿಕ ವೈದ್ಯರು ಆರೋಗ್ಯ ಮೇಳದಲ್ಲಿ ಕಾರ್ಯನಿರ್ವಹಿಸಲಿದ್ದು ಸಾರ್ವಜನಿಕರು ಇದರ ಅನುಕೂಲ ಪಡೆದುಕೊಳ್ಳಬೇಕು ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ಕೃಷಿ ಮೇಳವನ್ನು ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಗಳು ಜಂಟಿಯಾಗಿ ಸಂಘಟಿಸ ಬೇಕು. ಕೃಷಿಕರಿಗೆ ಅನುಕೂಲವಾಗುವ ಮಾಹಿತಿ ಪ್ರಾತ್ಯಕ್ಷಿಕೆ ಏರ್ಪಡಿಸಬೇಕು ಎಂದು ನಿರ್ದೇಶನ ನೀಡಿದರು.
ಮಹಿಳಾ ಮೇಳ: ಫೆ.18 ರಂದು ಮಹಿಳಾ ಮೇಳ ನಡೆಯಲಿದ್ದು ರೈತರು ಮಾಡಿರುವ ಕೃಷಿ ಸಾಲ ಮನ್ನಾವಾಗಿರುವ ಫಲಾನುಭಗಳಿಗೆ ಸಾಲ ತೀರುವಳಿ ಪತ್ರ ವಿತರಣೆ ಮಾಡಲಾಗುವುದು. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಲ ತೀರುವಳಿ ಪತ್ರ ವಿತರಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಶಿಷ್ಠಾಚಾರದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸಂಘಟಿಸು ವಂತೆ ಸಚಿವರು ಸೂಚನೆ ನೀಡಿದರು.
ಫೆ.15 ರಿಂದ 18 ರವರೆಗೆ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಮತ್ತು ಉಪಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೆ. ಶಂಕರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಭೆಯ ನಂತರ ರೇವಣ್ಣ ಅವರು ಮುಖ್ಯಮಂತ್ರಿ ಯವರ ಕಾರ್ಯಕ್ರಮ ನಡೆಯುವ ಜಿಲ್ಲಾ ಕ್ರೀಡಾಂಗಣ ಮತ್ತು ಕಲಾ ಕಾಲೇಜು ಮೈದಾನಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
167 ಕೋಟಿ ರೂ. ಏತ ನೀರಾವರಿ ಯೋಜನೆಗೆ ಚಾಲನೆ ಹಾಸನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಧ್ಯಾಹ್ನ 2.30 ಗಂಟೆಗೆ ಚನ್ನರಾಯಪಟ್ಟಣ ತಾಲೂಕಿನ 167 ಕೋಟಿ ರೂ. ಅಂದಾಜಿನ 2 ಏತ ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಕಾವೇರಿ ನೀರಾವರಿ ನಿಗಮದಿಂದ ಕೈಗೊಳ್ಳುವ ಚನ್ನರಾಯಪಟ್ಟಣ ತಾಲೂಕು, ಆನೆಕೆರೆ ಗ್ರಾಮದ ಶ್ರೀ ಶಂಭುದೇವರ ಕೆರೆಯಿಂದ ನೀರೆತ್ತಿ ಚನ್ನರಾಯಪಟ್ಟಣ ತಾಲೂಕಿನ 26 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಹಾಲಿ ಇರುವ ಆಲ ಗೊಂಡನಹಳ್ಳಿ ಏತ ನೀರಾವರಿ ವ್ಯಾಪ್ತಿಯ
ಅಚ್ಚುಕಟ್ಟಿಗೆ ನೀರು ಒದಗಿಸುವ ಯೋಜನೆಯ ರೂ. 47 ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ ನೀಡುವುರು.
ಚನ್ನರಾಯಪಟ್ಟಣ ತಾಲೂಕು ದಂಡಿಗನಹಳ್ಳಿ ಹೋಬಳಿಯ ಕಾಚೇನಹಳ್ಳಿ ಏತ ನೀರಾವರಿ ಯೋಜನೆಯ ಮೂರನೇ ಹಂತಕ್ಕೆ ನೀರು ಒದಗಿಸುವ 141.50 ಕೋಟಿ ರೂ.ವೆಚ್ಚದ ಕಾಮಗಾರಿಗಳ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಯವರು ನೆರವೇರಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.