ಕಳ್ಳಭಟ್ಟಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಿ
Team Udayavani, May 20, 2019, 10:35 AM IST
ಹಾಸನ: ಜಿಲ್ಲೆಯನ್ನು ಕಳ್ಳಬಟ್ಟಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಅಬಕಾರಿ ಇಲಾಖೆಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದ ಕಳ್ಳಭಟ್ಟಿ ನಿರ್ಮೂಲನೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಬೇಲೂರು ಹಾಗೂ ಸಕಲೇಶಪುರ ತಾಲೂಕುಗಳಲ್ಲಿ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಕಾಫಿ ತೋಟ, ರೆಸಾರ್ಟ್ಗಳನ್ನು ಪರಿಶೀಲಿಸಿ ಅಂತಹ ಪ್ರದೇಶಗಳಲ್ಲಿಯೇ ಕಳ್ಳಭಟ್ಟಿ ಪತ್ತೆಯಾಗುತ್ತಿದ್ದು, ಅದರ ಜೊತೆಗೆ ಇತರೆ ಪ್ರದೇಶಗಳಲ್ಲಿ ಹೆಚ್ಚಿನ ದಾಳಿ ನಡೆಸಿ ಪರಿಶೀಲಸಿ ಕಳ್ಳಭಟ್ಟಿ ನಿರ್ಮೂ ಲನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಮಲೆನಾಡು ಪ್ರದೇಶಗಳಲ್ಲಿ ಕಳ್ಳಭಟ್ಟಿ ತಯಾರಿಕೆ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು ಅರಣ್ಯದಂಚಿನ ಪ್ರದೇಶ ಗಳನ್ನು ಸೂಕ್ಷ್ಮವಾಗಿ ಗಮನಿಸಿ ಈ ಕೃತ್ಯ ನಡೆಸುತ್ತಿರುವವರ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ. ಅಂತಹವರು ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಅನರ್ಹರು ಎಂಬುದಾಗಿ ಪರಿಗಣಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೆ ಈ ರೀತಿಯ ಕಳ್ಳಭಟ್ಟಿ ತಯಾರಿಕೆಯಲ್ಲಿ ಭಾಗವಹಿಸಿ ಅದನ್ನು ಬಿಟ್ಟು ಬೇರೆ ವೃತ್ತಿಯಲ್ಲಿ ತೊಡಗಿಸಿ ಕೊಂಡಿರುವವರಿಗೆ ವಿವಿಧ ಯೋಜನೆ ಗಳಲ್ಲಿ ದೊರೆಯುವ ಸಾಲ ಸೌಲಭ್ಯ ಗಳನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿ ಸಬೇಕು. ಜೊತೆಗೆ ಅಕ್ರಮ ಮದ್ಯ ಮಾರಾಟ ಕಂಡುಬಂದಲ್ಲಿ ತಕ್ಷಣವೇ ದೂರು ನೀಡುವಂತೆ ಜನರಿಗೆ ತಿಳಿವಳಿಕೆ ಮೂಡಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ಅರಣ್ಯ ಇಲಾಖೆ, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.