ರೈತರ ಬೆಳೆಗೆ ಸೂಕ್ತ ಬೆಲೆ ಸಿಗಲಿ
Team Udayavani, Dec 29, 2019, 3:00 AM IST
ಅರಸೀಕೆರೆ: ದೇಶದ ಬೆನ್ನೆಲುಬಾದ ರೈತರ ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡುವುದು ಅಗತ್ಯ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕೃಷಿ ಕ್ಷೇತ್ರ ಅಭಿವೃದ್ಧಿಯಾಗಲಿ: ದೇಶದಲ್ಲಿ ಕೃಷಿ ಕ್ಷೇತ್ರ ಅಭಿವೃದ್ಧಿ ಆಗದ ಇನ್ನಿತರ ಕ್ಷೇತ್ರಗಳ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಕೃಷಿ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ರೈತ ಸಮುದಾಯ ಆರ್ಥಿಕ ಸುಧಾರಣೆಯಾಗಬೇಕಾಗಿದೆ. ದೇಶದಲ್ಲಿ ಶೇ.70 ಮಂದಿ ಕೃಷಿ ಅವಲಂಬಿತರಾಗಿದ್ದಾರೆ ಎಂದರು.
ಹೈನುಗಾರಿಕೆಗೆ ಪ್ರೋತ್ಸಾಹಿಸಿ: ರೈತರ ಬಗ್ಗೆ ಅನುಕಂಪದ ಮಾತುಗಳನ್ನು ಹೇಳುವ ಬದಲು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಬೆಲೆಯನ್ನು ದೊರಕುವಂತಹ ವ್ಯವಸ್ಥೆಯನ್ನು ಹಾಗೂ ಕೃಷಿ ಕ್ಷೇತ್ರಕ್ಕೆ ಪೂರಕವಾದ ಹೈನುಗಾರಿಕೆಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಮಾತ್ರ ರೈತ ಸಮುದಾಯದ ಬದುಕು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮಳೆಯನ್ನೇ ನೆಚ್ಚಿಕೊಂಡಿರುವ ರೈತರು ಬದುಕು ದುಸ್ತರವಾಗುತ್ತದೆ.
ಅಭಿವೃದ್ಧಿಗೆ ಶಾಸಕರ ಆದ್ಯತೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಜಯರಾಂ ಮಾತನಾಡಿ, ಶಾಸಕ ಶಿವಲಿಂಗೇಗೌಡರ ವಿಶೇಷ ಆಸಕ್ತಿಯಿಂದಾಗಿ ನಗರ ಸೇರಿದಂತೆ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಗಳು ಅಭಿವೃದ್ಧಿ ಕಾಣುತ್ತಿದೆ ಎಂದರು.
ಗ್ರಾಮೀಣ ಭಾಗದಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಿರುವುದರಿಂದ ತಾಲೂಕಿನ ರೈತರು ತಾವು ಬೆಳೆದ ದವಸ ಧಾನ್ಯಗಳನ್ನ ಮಾರುಕಟ್ಟೆಗೆ ತರಲು ಸಹಕಾರಿಯಾಗಿರುವುದರಿಂದ ಅರಸೀಕೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಉಪ ಮಾರುಕಟ್ಟೆಗಳಲ್ಲಿ ಉತ್ತಮ ವ್ಯಾಪಾರ ವ್ಯವಹಾರ ನಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಮಾಜಿ ಅಧ್ಯಕ್ಷ ಕೆ.ಎಸ್ ಚಂದ್ರಶೇಖರ್, ನಿರ್ದೇಶಕರಾದ ಚಿಕ್ಕೇಗೌಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸಿದ್ದರಾಜು, ದುಮ್ಮೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಗಿರೀಶ್, ಹಮಾಲಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಕುಮಾರಸ್ವಾಮಿ, ಗುತ್ತಿಗೆದಾರರಾದ ಮನೋಜ್ಕುಮಾರ್ ಇದ್ದರು.
ಎಪಿಎಂಸಿಗಳಿಗೆ ಮೂಲ ಸೌಕರ್ಯ: ತಾಲೂಕಿನ ರೈತರು ತಾವು ಬೆಳೆಯುವ ಬೆಳೆಯನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುಕೂಲವಾಗುವಂತೆ ರಾಜ್ಯದ ಎ ಗ್ರೇಡ್ ಮಾರುಕಟ್ಟೆಗಳಲ್ಲಿ ಒಂದಾದ ಅರಸೀಕೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸೇರಿದಂತೆ ಗಂಡಸಿ, ಬಾಣಾವರ, ಕಲ್ಲುಸಾದರಹಳ್ಳಿ ಉಪ ಮಾರುಕಟ್ಟೆಗಳಳಿಗೆ ರೈತರ ಅಗತ್ಯಕ್ಕೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿದ್ದು, ತಾಲೂಕಿನ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.