ಹಕ್ಕು, ಕರ್ತವ್ಯ ಪಾಲನೆಯಿಂದ ಮಾನವ ಹಕ್ಕು ರಕ್ಷಿಸಿ
Team Udayavani, Dec 12, 2019, 3:00 AM IST
ಅರಸೀಕೆರೆ: ಪ್ರತಿಯೊಬ್ಬರಗೂ ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪಾಲಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯ ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ನಿರ್ಮಲಾ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದ ಸಂವಿಧಾನ ಶ್ರೇಷ್ಠ: ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯವನ್ನು ನೀಡಲಾಗಿದೆ. ಮೂಲಭೂತ ಸೌಲಭ್ಯಗಳನ್ನು ಸರ್ಕಾರ ವಿವಿಧ ಯೋಜನೆಗಳ ಮೂಲಕ ನೀಡುತ್ತಿದೆ ಅವುಗಳನ್ನು ಸದುಪಯೋಗ ಪಡೆದುಕೊಂಡು ಎಲ್ಲರೂ ದೇಶದ ಉತ್ತಮ ನಾಗರಿಕರಾಗಿ ಬೆಳೆಯಬೇಕಾಗಿದೆ ಎಂದರು.
ಮಹಿಳೆಯರು, ಮಕ್ಕಳ ರಕ್ಷಣೆ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿರುವುದರಿಂದ ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣೆಗಾಗಿ ಸರ್ಕಾರ ವಿಶೇಷ ಕಾನೂನು ಜಾರಿ ತರುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಸಮಾಜದಲ್ಲಿ ಜಾಗೃತಿ ಮೂಡಿಸಲು ಮಾನವ ಹಕ್ಕುಗಳ ಸಂರಕ್ಷಣೆಗಾಗಿ ಅನೇಕ ಕಾರ್ಯಕ್ರಮಗಳನ್ನು ಕಾನೂನು ಸೇವಾ ಸಮಿತಿಯ ಮೂಲಕ ನಡೆಸಲಾಗುತ್ತಿದೆ. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಹೆಚ್ಚು ತಿಳಿದುಕೊಂಡಾಗ ಮಾತ್ರ ಕಿಡಿಗೇಡಿಗಳ ಮೋಸ ವಂಚನೆ ದುಷ್ಕೃತ್ಯಕ್ಕೆ ಯಾರೂ ಕೂಡ ಬಲಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಮಕ್ಕಳಿಗೆ ಸಂಸ್ಕಾರ ಕಲಿಸಿ: ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರಸ್ವಾಮಿ ಮಾತನಾಡಿ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಲು ಸಾಧ್ಯವಾಗುತ್ತದೆ ಎಂದರು. ಹೆಣ್ಣು ಮಕ್ಕಳನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವ ವಾತವರಣ ಸಮಾಜದಲ್ಲಿ ನಿರ್ಮಾಣವಾದರೆ ಆತ್ಯಾಚಾರದ ಕೃತ್ಯಗಳು ತಡೆಯಲು ಸಾಧ್ಯ, ಬಗ್ಗೆ ಪ್ರತಿಯೊಬ್ಬ ಮಹಿಳೆಯರು ಹೆಚ್ಚಿನ ಜಾಗೃತಿ ವಹಿಸಬೇಕೆಂದು ತಿಳಿಸಿದರು.
ಎ.ಜಿ.ಪಿ. ವಕೀಲ ವಿಜಯಕುಮಾರ್ ಮಾತನಾಡಿ, ಮಹಿಳೆಯರು ಸುಶಿಕ್ಷಿತರಾಗಿ ಜಾಗೃತಿ ಯಾದರೇ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಸುಲಭ ಸಾಧ್ಯದಲ್ಲಿ ನಿವಾರಣೆ ಮಾಡಲು ಸಾಧ್ಯ ಎಂದು ಅವರು ಹೇಳಿದರು. ಹಿರಿಯ ವಕೀಲ ಕಲ್ಯಾಣ್ ಕುಮಾರ್ ಮಾನವ ಹಕ್ಕುಗಳು ಮತ್ತು ಕರ್ತವ್ಯ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ನೀಲಕಂಠಪ್ಪ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಸಿ.ನಟರಾಜ್ ಮತ್ತು ಶಾಲಾ ಶಿಕ್ಷಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.