ಮುಂದಿನ ಪೀಳಿಗೆಗೆ ಪರಿಸರ ಉಳಿಸಿ
Team Udayavani, Jun 6, 2020, 6:24 AM IST
ಹಾಸನ: ಪ್ರತಿಯೊಬ್ಬರೂ ಒಂದೊಂದು ಸಸಿ ನೆಡುವ ಮೂಲಕ ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಹೇಳಿದರು.
ನಗರದ ಹೊಸ ಬಸ್ ನಿಲ್ದಾಣದ ಎದುರು ಹೌಸಿಂಗ್ ಬೋರ್ಡ್ ಕಾಲೋನಿಯ ಪಾರ್ಕಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಪರಿಸರ ಸಂರಕ್ಷಣಾ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಾಲುಮರದ ತಿಮ್ಮಕ್ಕಸಾವಿರಾರು ಸಸಿಗಳನ್ನು ಬೆಳೆಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ಅರಣ್ಯ ಇಲಾಖೆ ಅಧಿಕಾರಿ ಶಿವರಾಂ ಮಾತನಾಡಿ, ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಸ್ಪರ್ಧೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಸಸಿ ಕೊಂಡೊಯ್ದು ವಿಡಿಯೋ ಮಾಡಿ ಕಳುಸಿದರೆ ಗಿಡನೆಡುವ ಉತ್ತಮ ಕಾರ್ಯಕ್ಕೆ ಬಹುಮಾನ ವಿತರಿಸಲಾಗುವುದು ಎಂದರು.
ಎಸ್ಪಿ ಶ್ರೀನಿವಾಸ್ಗೌಡ, ಜಿಪಂಸಿ ಇಒ ಬಿ.ಎ.ಪರಮೇಶ್, ಉಪ ವಿಭಾಗಾಧಿಕಾರಿ ನವೀನ್ ಭಟ್, ಸ್ವಾತಂತ್ರ ಹೋರಾಟಗಾರ ಎಚ್.ಎಂ. ಶಿವಣ್ಣ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶಂಕರ್ ಹಾಜರಿದ್ದರು.