ಅಧಿಕಾರಿಗಳಿಗೆ ಸಾಮಾಜಿಕ ಕಳಕಳಿ ಇರಲಿ: ಡೀಸಿ ಸಲಹೆ
Team Udayavani, Dec 20, 2019, 2:06 PM IST
ಹಾಸನ: ಎಲ್ಲ ಇಲಾಖಾ ಅಧಿಕಾರಿಗಳು ಸಾಮಾಜಿಕ ಕಳಕಳಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಗುರುತಿಸಲಾಗಿರುವ ಸರ್ಕಾರಿ ಜಮೀನನ್ನು ವಸತಿ ಯೋಜನೆಗಳಿಗೆ ಕಾಯ್ದಿರಿಸಿ ಮಂಜೂರು ಮಾಡಬೇಕು. ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ ಒತ್ತುವರಿ ತೆರವುಗೊಳಿಸಿ ನಿವೇಶನ ಹಂಚಿಕೆ ಕೆಲಸವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದರು.
ಸರ್ಕಾರದ ಯಾವುದೇ ಕಾಮಗಾರಿಗಳಿಗೆಸಂಬಂಧಿಸಿದಂತೆ ಸರ್ವೆ ವರದಿಗಳು ಪಾರದರ್ಶಕ ಹಾಗೂ ಸಮರ್ಪಕವಾಗಿರಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ಕೊಡಬೇಡಿ ಎಂದು ಸರ್ವೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಉಪಭಾಗಾಧಿಕಾರಿಗಳಾದ ಡಾ. ನವೀನ್ ಭಟ್ ಮತ್ತು ಗಿರೀಶ್ ನಂದನ್, ಮುಖ್ಯ ಯೋಜನಾಧಿಕಾರಿ ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.