ಜಿಲ್ಲೆಯಲ್ಲಿ ಬಿಜೆಪಿಗೆ 4 ಗೆಲುವ
Team Udayavani, Jan 11, 2018, 2:53 PM IST
ಅರಸೀಕೆರೆ: ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅರಸೀಕೆರೆ ಸೇರಿದಂತೆ ನಾಲ್ಕಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆಂದು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚೆಲ್ಲಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,
ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯದ ಚುನಾವಣೆ ಫಲಿತಾಂಶ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಇಲ್ಲಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರನ್ನು ನಿದ್ದೆಗೆಡಿಸುತ್ತಿದೆ ಎಂದು ಟೀಕಿಸಿದರು.
ಸರ್ಕಾರಿ ಹಣದಲ್ಲಿ ಪ್ರಚಾರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಕೈಗೊಂಡ ನೋಟ್ ಬ್ಯಾನ್ ಹಾಗೂ ಜಿಎಸ್ಟಿ ತೆರಿಗೆ ಪದ್ಧತಿ ಬಗ್ಗೆ ರಾಜ್ಯದ ಜನರಲ್ಲಿ ತಪ್ಪು ಭಾವನೆ ಉಂಟು ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಹುನ್ನಾರ ನಡೆಸುತ್ತಿದೆ. ರಾಜ್ಯ ಸರ್ಕಾರ ಹಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಧನಾ ಸಮಾವೇಶಗಳನ್ನು ಮಾಡುತ್ತಾ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿರುವುದು ಖಂಡನೀಯ. ರಾಜ್ಯದ ಜನತೆ ಮತದಾನದ ಮೂಲಕ ತಕ್ಕ ಉತ್ತರ ನೀಡಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ
ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿರುವ ವ್ಯಾಪಕ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನೀತಿಯನ್ನು ವಿರೋಧಿಸಿ ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದಾರೆ. ಆದಕಾರಣ ಹಾಸನ ಮತ್ತು ಚಾಮರಾಜ ನಗರ ಜಿಲ್ಲೆಯ ಉಸ್ತುವಾರಿಯನ್ನು ತಾವು ವಹಿಸಿಕೊಂಡಿದ್ದು, ಈ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪ್ರತಿ ಕ್ಷೇತ್ರಗಳಲ್ಲಿ ಬೂತ್ಮಟ್ಟದ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತಿದೆ. ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಪರಿವರ್ತನಾ ಯತ್ರೆಯೂ ಮುಗಿಯುತ್ತಿದ್ದಂತೆ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
7 ಕ್ಷೇತ್ರದಲ್ಲಿ ಸ್ಪರ್ಧೆ: ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅರಸೀಕೆರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ನಾಲ್ಕೈದು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸುವ
ದೃಢ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕರಾದ ಎ.ಎಸ್.ಬಸವರಾಜು, ಕೆ.ಪಿ.ಪ್ರಭುಕುಮಾರ್, ಹಿರಿಯ ಮುಖಂಡ ಸಿ.ರಾಮಚಂದ್ರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲಾ ವಕ್ತಾರ ಎನ್.ಡಿ.ಪ್ರಸಾದ್, ತಾಲೂಕು ಮಾಜಿ ಅಧ್ಯಕ್ಷ ಡಿ.ಬಿ.ಗಂಗಾಧರ್, ಸಿ.ರಾಮಚಂದ್ರ ಅಗ್ಗುಂದ ಶಕ್ತಿ ಕೇಂದ್ರದ ದುಮ್ಮೇನಹಳ್ಳಿ ಲೋಕೇಶ್, ಜಿಪಂ ಮಾಜಿ ಸದಸ್ಯ ಕೃಷ್ಣನಾಯ್ಕ, ನಗರಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ರವಿಕುಮಾರ್, ವಿಜಯಕುಮಾರ್, ಲಾಳನಕೆರೆ ಯೋಗೀಶ್ ಇತರರು ಭಾಗವಹಿಸಿದ್ದರು.