ಆಯುಷ್ಮಾನ್ ಭಾರತ್ ಬಡವರಿಗೆ ಸಂಜೀವಿನಿ: ಭಾಜಪೇಯಿ
Team Udayavani, Sep 23, 2019, 12:50 PM IST
ಹಾವೇರಿ: ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕುಷ್ಠರೋಗನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 8722 ಕಾರ್ಡ್ ವಿತರಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ದಾರರಿಗೆ ಐದು ಲಕ್ಷ ರೂ.ವರೆಗೆ ವೈದ್ಯಕೀಯ ಉಚಿತ ಚಿಕಿತ್ಸೆ ನೀಡಲಾಗುವುದು. ಅದರಂತೆ ಎಪಿಎಲ್ ಕಾರ್ಡ್ದಾರರಿಗೆ ಶೇ.30 ರಷ್ಟು ರಿಯಾಯಿತಿ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಆರೋಗ್ಯ ಟ್ರಸ್ಟ್ನ ವಿಭಾಗೀಯ ಸಮಾಲೋಚಕ ಡಾ| ಬಿ.ಡಿ.ಗಾಂಗೆ ಮಾತನಾಡಿ, ಆಯುಷ್ಮಾನ ಭಾರತ ಯೋಜನೆಯಡಿ 1650 ಚಿಕಿತ್ಸಾ ವಿಧಾನ ಒಳಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಳು ಮತ್ತು ಸರಳ ದ್ವಿತೀಯ ಹಂತದ 291 ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಕ್ಲಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳನ್ನು ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ತಾವು ಇಚ್ಛಿಸುವ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ಭಾಕರ ಕುಂದೂರ, ಸುವರ್ಣ ಆರೋಗ್ಯ ಟ್ರಸ್ಟ್ ಜಿಲ್ಲಾ ಸಂಯೋಜಕ ಮಹಾದೇವ ನಿಲಂಗಿ ಇತರರು ಇದ್ದರು.