ಹಾವೇರಿ: ಪ್ರತಿ ಅರ್ಹ ಮಗುವಿಗೂ ಪೋಲಿಯೋ ಲಸಿಕೆ ತಲುಪಲಿ
Team Udayavani, Feb 29, 2024, 5:53 PM IST
ಉದಯವಾಣಿ ಸಮಾಚಾರ
ಹಾವೇರಿ: ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ. 3ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಲಸಿಕಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ವಿಶೇಷವಾಗಿ ಕಾಳಜಿವಹಿಸಿ ಕೊಳಚೆ ಪ್ರದೇಶ, ಹೆಚ್ಚು ಅಪಾಯಕಾರಿ ಪ್ರದೇಶ, ಅನಾಥಾಶ್ರಮ, ವಲಸೆ ಕಾರ್ಮಿಕರ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕೇಂದ್ರೀಕರಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಪೋಲಿಯೋ ಕಾರ್ಯಕ್ರಮದ ಕುರಿತು ಶಾಲಾ ಮಕ್ಕಳಿಂದ ಪ್ರಭಾತಪೇರಿ ಆಯೋಜಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸದ ವಾಹನಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕೆಂದು ಸಂಬಂಧಿ ಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಹೆಸ್ಕಾಂ, ಸ್ಥಳೀಯ ನಗರ ಸಂಸ್ಥೆಗಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಲಸಿಕಾ ಕಾರ್ಯಕ್ರಮ
ನಡೆಯುವ ಸಮಯದಲ್ಲಿ ಲಸಿಕೆ ಸುರಕ್ಷಿತವಾಗಿಡಲು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ಜಯಾನಂದ ಮಾತನಾಡಿ, ಜಿಲ್ಲೆಯಲ್ಲಿ 1,70,168 ಸೊನ್ನೆಯಿಂದ ಐದು ವರ್ಷದ ಮಕ್ಕಳನ್ನು ಗುರುತಿಸಲಾಗಿದೆ. ಮಾ. 3ರಂದು ಬೂತ್ ಮಟ್ಟದಲ್ಲಿ, ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ಮೂಲಕ ಪೋಲಿಯೋ ಲಸಿಕೆ ಹಾಕಲಾಗುವುದು. ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.
ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಪಿಎಚ್ಸಿ ಸೇರಿದಂತೆ ಒಟ್ಟು 1004 ಬೂತ್ಗಳನ್ನು ಸ್ಥಾಪಿಸಲಾಗಿದೆ. 196 ಸೂಪರವೈಸರ್, 254 ಪಿಎಚ್ಸಿಒ, 2008 ವ್ಯಾಕ್ಸಿನೇಟರ್ಸ್, 1438 ಆಶಾ ಹಾಗೂ 1960 ಅಂಗನವಾಡಿ ಕಾರ್ಯಕರ್ತೆಯರನ್ನು ಪೋಲಿಯೋ
ಕಾರ್ಯಕ್ಕೆ ನಿಯೋಜಿಸಲಾಗಿದೆ. 92 ವ್ಯಾಕ್ಸಿನ್ ಸೆಂಟರ್ಗಳಿಂದ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ.93 ವಾಹನಗಳ ಅವಶ್ಯಕತೆ ಇದೆ ಎಂದರು.
ಬೆಳಗಾವಿಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಡಾ| ಸಿದ್ಧಲಿಂಗಯ್ಯ ಅವರು ಪೋಲಿಯೋ ಕಾರ್ಯಕ್ರಮದ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಆರ್.ಎನ್. ಹಾವನೂರ, ಡಾ| ನೀಲೇಶ, ಡಾ| ಜಗದೀಶ, ಡಾ| ವಿರಕ್ತಮಠ, ಡಾ| ಸರಿತಾ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭಾಕರ ಕುಂದೂರ, ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.