ಹೊಸನೀರಲಗಿಯಲ್ಲಿ ಡಿಸಿ ಗ್ರಾಮ ವಾಸ್ತವ್ಯ
ಗೈರಾದ ಅಧಿಕಾರಿಗಳಿಗೆ ನೋಟಿಸ್ ! ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಎಚ್ಚರಿಕೆ
Team Udayavani, Feb 11, 2021, 1:54 PM IST
ಸವಣೂರ: ಹೊಸನೀರಲಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಫೆ.20ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಇಲಾಖೆ ಅಧಿಕಾರಿಗಳು ಮಾಹಿತಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಗೈರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಎಚ್ಚರಿಕೆ ನೀಡಿದರು.
ಪಟ್ಟಣದ ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕುರಿತು ಬುಧವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ವಾಸ್ತವ್ಯ ಕೈಗೊಳ್ಳುತ್ತಿರುವ ಹೊಸನೀರಲಗಿ ಗ್ರಾಮ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಸುದ್ದಿ ಕೇಳಿ ಬಂದಿದೆ. ಅಬಕಾರಿ ಆರಕ್ಷಕರು ಕೂಡಲೇ ಕ್ರಮ ವಹಿಸಿ ವರದಿ ನೀಡುವಂತೆ ಸೂಚನೆ ನೀಡಿದರು.
ಮಂತ್ರವಾಡಿ ಗ್ರಾಪಂ ಪಿಡಿಒ ಈಶ್ವರಪ್ಪ ಎನ್.ಒ ಹೊಸನೀರಲಗಿ ಗ್ರಾಮದ ಬಸ್ ನಿಲ್ದಾಣದ ಅಕ್ಕಪಕ್ಕದ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ತೊಂದರೆ ಉಂಟಾಗಿರುವ ಕುರಿತು ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ. ಅ ಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ತಾಲೂಕು ಮಟ್ಟದ ಇಲಾಖೆಗಳ ಅಧಿಕಾರಿಗಳು ಪ್ರತಿ ತಿಂಗಳು ಡಿಸಿ ನೇತೃತ್ವದಲ್ಲಿನಡೆಯುವ ಗ್ರಾಮ ವಾಸ್ತವ್ಯದ ಗ್ರಾಮಕ್ಕೆ ಭೇಟಿ ನೀಡಿ ಇಲಾಖೆಗಳಲ್ಲಿನ ಸಮಸ್ಯೆಗಳ ಕುರಿತು ಪಟ್ಟಿ ಮಾಡಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರೆಜಿಸ್ಟಾರ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ರೈತರ ಬೆಳೆಹಾನಿ, ರೈತ ಆತ್ಮಹತ್ಯೆ ಸೇರಿದಂತೆ ರೈತರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಯೋಜನೆಗಳ ಸಮಗ್ರ ಮಾಹಿತಿ ಕಲೆ ಹಾಕಲು ಸೂಚಿಸಿದರು.
ಗ್ರಾಪಂ ಪಿಡಿಒಗಳು ಸಂಬಂಧಿಸಿದ ಗ್ರಾಮಗಳ ವಸತಿ, ನೀರು, ಶೌಚಾಲಯ ಹಾಗೂ ಇತರೆ ಮೂಲ ಸೌಲಭ್ಯಗಳ ಕುರಿತು ಗಮನಹರಿಸಿ ಅನುಕೂಲ ಕಲ್ಪಿಸಬೇಕು. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಭೂ ಮಾಪಕರು ರೈತರ ಜಮೀನುಗಳಿಗೆ ಸಂಬಂಧಿಸಿದ ಸಮಸ್ಯೆ ಕುರಿತು ಗಮನ ಹರಿಸಬೇಕು. ಪಿಂಚಣಿ ಯೋಜನೆ ಸೌಲಭ್ಯ ಪ್ರತಿ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಇದನ್ನೂ ಓದಿ :ತಾಪಂ-ಜಿಪಂ ಚುನಾವಣೆ ಮುಂದೂಡಿಕೆ ಸರಿಯಲ್ಲ
ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಪೂರ್ವಭಾವಿ ಸಭೆಗೆ ಗೈರಾದ ಶಿಶು ಅಭಿವೃದ್ಧಿ, ಸಮಾಜ ಕಲ್ಯಾಣ, ಸಾರಿಗೆ, ಪಂಚಾಯತ್ ರಾಜ್ಯ ಇಂಜಿನಿಯರಿಂಗ್, ನೀರು ಮತ್ತು ನೈರ್ಮಲ್ಯ ಹಾಗೂ ರಸ್ತೆ ಮತ್ತು ಒಳಚರಂಡಿ ಇಲಾಖೆ, ಶಿಕ್ಷಣ ಇಲಾಖೆ, ಹೆಸ್ಕಾಂ ಸೇರಿದಂತೆ ಹಲವಾರು ಇಲಾಖೆಗಳ ಅ ಧಿಕಾರಿಗಳು ಗೈರಾಗಿದ್ದರಿಂದ ಅಸಮಾಧಾನಗೊಂಡ ಉಪವಿಭಾಗಾಧಿಕಾರಿಗಳು ಗೈರಾದವರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.
ಈ ವೇಳೆ ಪ್ರಭಾರ ತಹಶೀಲ್ದಾರ್ ಸಿ.ಎಸ್. ಜಾಧವ, ಅಬಕಾರಿ ನಿರೀಕ್ಷಕ ಮಹೇಶಗೌಡ ಪಾಟೀಲ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.