ಕೈಗಾರಿಕೆ ಆರಂಭಿಸದ ಭೂಮಿ ವಾಪಸ್
Team Udayavani, Jul 22, 2020, 9:12 AM IST
ಹಾವೇರಿ: ಕೈಗಾರಿಕೆ ಉದ್ದೇಶಕ್ಕಾಗಿ ಭೂಮಿ ಖರೀದಿಸಿ ಉದ್ಯಮ ಆರಂಭಿಸದೇ ಭೂಮಿ ಖಾಲಿ ಬಿಟ್ಟರೆ ಅದನ್ನು ವಾಪಸ್ ಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಮಂಗಳವಾರ ಸಂಜೆ ನಗರದಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೈಗಾರಿಕೆಗಾಗಿ ಭೂಮಿ ಹಂಚಿಕೆಯಾದರೂ ಇದುವರೆಗೆ ಉದ್ಯಮ ಆರಂಭಿಸದಿರುವುದು, ಬೇರೆ ಉದ್ದೇಶಕ್ಕೆ ಬಳಸಿರುವುದು, ಖಾಲಿ ಬಿಟ್ಟಿರುವುದರ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮೀಕ್ಷಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಟೌನ್ಶಿಪ್ ಆಗಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಆದರೆ, ನಗರಾಭಿವೃದ್ಧಿ ಇಲಾಖೆ ಅದಕ್ಕೆ ಆಸ್ಪದ ನೀಡಿರಲಿಲ್ಲ. ನಗರಾಭಿವೃದ್ಧಿ ಸಚಿವರು ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಟೌನ್ಶಿಪ್ಗೆ ಪ್ರೋತ್ಸಾಹ ನೀಡಲು ಒಪ್ಪಿಗೆ ಪಡೆಯಲಾಗಿದೆ. ಪೀಣ್ಯ, ದಾಬಸ್ಪೇಟೆ, ಹುಬ್ಬಳ್ಳಿ ಸೇರಿದಂತೆ ಈಗಾಗಲೇ ಕೈಗಾರಿಕೆ ಸ್ಥಾಪಿಸುವವರೇ ಟೌನ್ ಶಿಪ್ ಕೇಳುತ್ತಿದ್ದಾರೆ. ಪ್ರಾಥಮಿಕ ಹಂತದಿಂದಲೇ ಟೌನ್ಶಿಪ್ ಅಭಿವೃದ್ಧಿಗೆ ಕ್ರಮ ಕೈಗೊಂಡರೆ ಮಾದರಿ ಆಗಲಿದೆ. ಈ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಹಾವೇರಿ ಹೊರವಲಯದಲ್ಲಿ 400 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದನ್ನು ಮುಂದುವರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ, ಹೊಸದಾಗಿ 1000 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಮಾದರಿ ಟೌನ್ಶಿಪ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಣೆಬೆನ್ನೂರು, ಸವಣೂರು, ಬ್ಯಾಡಗಿ, ಶಿಗ್ಗಾಂವಿಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆದಷ್ಟು ಬೇಗ ಸೈಟ್ ಹಂಚಿಕೆ ಮಾಡಲಾಗುವುದು. ಗುಡಿ ಕೈಗಾರಿಕೆ ಸ್ಥಾಪನೆಗೆ ಸಣ್ಣ ಉದ್ಯಮ ಸ್ಥಾಪನೆ ಪ್ರೋತ್ಸಾಹಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರದೇಶವನ್ನು ಕೈಗಾರಿಕಾ ಕಾರಿಡಾರ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಈ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆಯಾಗಲಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕೈಗಾರಿಕೆ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.