ಯೂರಿಯಾ ಗೊಬ್ಬರ ದಾಸ್ತಾನಿಗೆ ಸೂಚನೆ
ಗೊಬ್ಬರ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಮಾರಾಟಗಾರರು; ಸೆಪ್ಟೆಂಬರ್ವರೆಗೆ 48 ಸಾವಿರ ಮೆಟ್ರಿಕ್ ಟನ್ ಬೇಡಿಕೆ
Team Udayavani, Jul 16, 2020, 3:25 PM IST
ಹಾವೇರಿ: ಜಿಪಂ ಅಧ್ಯಕ್ಷ ಬಸನಗೌಡ ದೇಸಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಭೆ ನಡೆಯಿತು.
ಹಾವೇರಿ: ಜಿಲ್ಲಾದ್ಯಂತ ಬಿತ್ತನೆಯಾಗಿದ್ದು ರಸಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ವಿಶೇಷವಾಗಿ ಯೂರಿಯಾ ಗೊಬ್ಬರದ ಕೊರತೆಯಾಗದಂತೆ ಅಗತ್ಯ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಬಸನಗೌಡ ದೇಸಾಯಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿಯ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು ಯೂರಿಯಾ ಗೊಬ್ಬರ ಪೂರೈಕೆ ಬಗ್ಗೆ ಮಾತನಾಡಿ, ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ನಿಗದಿತ ದರಕ್ಕಿಂತ 50ರಿಂದ 100 ರೂ.ಗಳ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಖರೀದಿಗೆ ಬಿಲ್ ಕೊಡುವುದಿಲ್ಲ, ರೈತರು ಬಿಲ್ ಕೇಳಿದರೆ ಯೂರಿಯಾ ಗೊಬ್ಬರ ಇಲ್ಲ ಎಂದು ಹೇಳುತ್ತಾರೆ. ಈ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ಈ ವರ್ಷ ಜಿಲ್ಲೆಯ ಬೇಡಿಕೆ ಹಾಗೂ ನಿಗದಿಯಾದ ಪ್ರಮಾಣದಂತೆ ಯೂರಿಯಾ ಪೂರೈಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ರೈತರು ಹೆಚ್ಚಾಗಿ ಯೂರಿಯಾ ಬಳಕೆ ಮಾಡುತ್ತಿದ್ದಾರೆ. ಪ್ರಸಕ್ತ ಸೆಪ್ಟೆಂಬರ್ ವರೆಗೆ 48 ಸಾವಿರ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಈಗಾಗಲೇ 49 ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಸದ್ಯದ ಸ್ಥಿತಿಯಲ್ಲಿ ಯೂರಿಯಾದ ಅಭಾವವಿಲ್ಲ. ಶೀಘ್ರವೇ ಮಂಗಳೂರಿನಿಂದ ಮತ್ತಷ್ಟು ಯೂರಿಯಾ ಗೊಬ್ಬರ ಜಿಲ್ಲೆಗೆ ಬರಲಿದ್ದು, ಪೂರೈಕೆಯಾದ ಶೇ.80ರಷ್ಟು ಪ್ರಮಾಣವನ್ನು ಸಹಕಾರಿ ಸಂಘಗಳ ಮೂಲಕ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ. ಹೆಚ್ಚುವರಿ ದರದಲ್ಲಿ ಯೂರಿಯಾ ಮಾರಾಟ ಮಾಡುತ್ತಿರುವ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಸ್ತುತ ಕೃಷಿ ಇಲಾಖೆಯಿಂದ ರೈತರಿಗೆ ಆನ್ಲೈನ್ ಮುಖಾಂತರ ತರಬೇತಿಗಳನ್ನು ನೀಡಲಾಗುತ್ತಿದೆ. ಪ್ರಸಕ್ತ ಮುಂಗಾರಿನಿಂದ ಬೆಳೆ ಸಮೀಕ್ಷೆ ಕಾರ್ಯವನ್ನು ಸ್ವತಃ ರೈತರೇ ಆ್ಯಪ್ ಬಳಸಿ ಜಮೀನಿನ ಬೆಳೆಯನ್ನು ಅಪ್ಲೋಡ್ ಮಾಡುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪುಸ್ತಕ ವಿತರಣೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿತರಿಸಲು ಈಗಾಗಲೇ ಜಿಲ್ಲೆಗೆ ಪಠ್ಯಪುಸ್ತಕಗಳು ಸರಬರಾಜಾಗಿದ್ದು, ಶಾಲೆಗಳಿಗೆ ಬದಲಾಗಿ ನೇರವಾಗಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲು ನಿರ್ದೇಶನ ಬಂದಿದೆ. ಐದೈದು ಮಕ್ಕಳನ್ನು ಕರೆದು ಪುಸ್ತಕಗಳನ್ನು ವಿತರಿಸಲಾಗುವುದು. ಶಾಲೆ ಆರಂಭಕ್ಕೆ ಮುನ್ನ ಮನೆಯಲ್ಲಿ ಅಭ್ಯಾಸ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಶೀಘ್ರವೇ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ
ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ವಿವರಿಸಿದರು.
ಪ್ರಸಕ್ತ ವರ್ಷ ಶಾಲೆಗಳ ದುರಸ್ತಿ, ಹೆಚ್ಚುವರಿ ಕೊಠಡಿಗಳ ನಿರ್ಮಾಣ ಸೇರಿದಂತೆ 416 ಲಕ್ಷ ರೂ. ವೆಚ್ಚದಲ್ಲಿ 224 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಜಿಲ್ಲಾ ಪಂಚಾಯಿತಿ ಹಾಗೂ ನಿರ್ಮಿತಿ ಕೇಂದ್ರಕ್ಕೆ ಅನುದಾನ ವರ್ಗಾಯಿಸಲಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಜೇಂದ್ರ ದೊಡ್ಮನಿ ಮಾಹಿತಿ ನೀಡಿ, ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ 75 ಹಾಸಿಗೆಗಳ ಸೆಂಟ್ರಲೈಸ್ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಹಾಗೆಯೇ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲೂ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ವ್ಯವಸ್ಥೆಯುಳ್ಳ ಹಾಸಿಗೆ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ಎಸ್ಡಿಆರ್ಎಫ್ ಅನುದಾನದಲ್ಲಿ ಇದರ ವೆಚ್ಚ
ಭರಿಸಲಾಗುತ್ತದೆ.
ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳನ್ನು ಕೋವಿಡ್ ಕೇರ್ ಸೆಂಟರ್, ಕ್ವಾರಂಟೈನ್ ಸೆಂಟರ್ಗಳಾಗಿ ಪರಿವರ್ತಿಸಿ ಸೌಲಭ್ಯ ಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲೆಗಳು, ವಿವಿಧ ಇಲಾಖೆಯ ವಸತಿ ನಿಲಯ, ವಸತಿ ಶಾಲೆಗಳಲ್ಲಿ ನೀರು ಮತ್ತು ಆವರಣ ಗೋಡೆ ಇರುವ ಕಡೆ ಕಿಚನ್ ಗಾರ್ಡ್ನ್ ನಿರ್ಮಾಣ ಮಾಡಲು ತ್ವರಿತವಾಗಿ ಕಾಯೋನ್ಮುಖವಾಬೇಕು. ತೋಟಗಾರಿಕೆ ಇಲಾಖೆ ಉಪನಿರ್ದೇಶಕರೊಂದಿಗೆ ವಿವಿಧ ಇಲಾಖೆ ಅಧಿ ಕಾರಿಗಳು ಸಮನ್ವಯ ಸಾಧಿಸಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮೇಶ ದೇಸಾಯಿ ಸಲಹೆ ನೀಡಿದರು.
ಹಲಗೇರಿ, ತುಮ್ಮಿನಕಟ್ಟೆ ಮಾರ್ಗದ ಹೆದ್ದಾರಿಯಲ್ಲಿ ರಸ್ತೆ ಗುಂಡಿಗಳನ್ನು ತುಂಬುವುದು ಹಾಗೂ ರಸ್ತೆ ಬದಿಯಲ್ಲಿ ಜಂಗಲ್ ಕಟಿಂಗ್ ತಕ್ಷಣವೇ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳಿಗೆ ಸೂಚನೆ ನೀಡಲಾಯಿತು. ಕಾಲೇಜು ಕಟ್ಟಡ, ಶಾಲೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಬೇಕು. ಈಗಾಗಲೇ ಪಂಚಾಯತ್ ರಾಜ್ ಇಂಜನೀಯರಂಗ್ ವಿಭಾಗದಿಂದ ನಿರ್ಮಿತಿ ಕೇಂದ್ರಕ್ಕೆ ವರ್ಗಾಯಿಸಲಾದ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು. ವರದಾ ಸಿರಿ ಯೋಜನೆಗೆ ಅಗತ್ಯವಾದ ಸಸಿಗಳನ್ನು ದಾವಣಗೆರೆ ವಿಭಾಗದಿಂದ ತರಿಸಿಕೊಳ್ಳಬೇಕು. ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವ ಕಾರ್ಯವನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಒಳಗೊಂಡಂತೆ ರಾಜ್ಯ ಮತ್ತು ಕೇಂದ್ರದ ಅನುದಾನಗಳ ಮಾಹಿತಿ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸಿಇಒ ಅವರ ಗಮನಕ್ಕೆ ತರಲು ಅಧಿಕಾರಿಗಳಿಗೆ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸೂಚನೆ ನೀಡಿದರು.
ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಾನಂದ ಕನ್ನಪ್ಪಳವರ, ಟಾಕನಗೌಡ ಪಾಟೀಲ
ಹಾಗೂ ಶಿವರಾಜ ಅಮರಾಪುರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಎನ್.ಕೆ., ಜಿಲ್ಲಾ ಮಟ್ಟದ ಅ ಧಿಕಾರಿಗಳು
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ