ಸಿಎಂ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸಿ.ಟಿ.ರವಿ
Team Udayavani, Dec 25, 2017, 6:25 AM IST
ಹಾವೇರಿ: ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಪ್ರಚಾರ ಮಾಡಿ, ಚುನಾವಣಾ ಅಭ್ಯರ್ಥಿಗಳನ್ನು ಘೋಷಿಸಿದ್ದು ಈ ಕುರಿತು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಬಿಜೆಪಿ ಮುಖಂಡ, ಶಾಸಕ ಸಿ.ಟಿ. ರವಿ ಹೇಳಿದರು. ನಗರದ ಶಿವಲಿಂಗೇಶ್ವರ ಕಾಲೇಜು ಆವರಣದಲ್ಲಿ ಭಾನುವಾರ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಭಾಷಣ ಮಾಡಿದ್ದಲ್ಲದೇ ಅದೇ ವೇದಿಕೆಯಲ್ಲೇ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಈ ಕುರಿತು ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮಕ್ಕೆ ವೆಚ್ಚ ಮಾಡಿದ ಹಣವನ್ನು ಕಾಂಗ್ರೆಸ್ನಿಂದ ವಸೂಲಿ ಮಾಡುತ್ತೇವೆ ಎಂದರು.
ನಾವು ಪಕ್ಷದ ಬ್ಯಾನರ್ನಲ್ಲಿ ರ್ಯಾಲಿ ನಡೆಸುತ್ತಿದ್ದೇವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಣ ಸೇರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಆದರೆ, ಸಿದ್ದರಾಮಯ್ಯನವರು ರಾಜ್ಯದ ಜನರ ತೆರಿಗೆ ಹಣದಲ್ಲಿ ಪಕ್ಷದ ಪ್ರಚಾರ ನಡೆಸಿದ್ದಾರೆ ಎಂದರು.