ಮತದಾರರ ಪಟ್ಟಿ ಪರಿಷ್ಕರಣೆಗೆ ಕೈಜೋಡಿಸಿ
Team Udayavani, Sep 27, 2019, 1:23 PM IST
ಹಾವೇರಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮಾರ್ಪಾಡು, ತಿದ್ದುಪಡಿ ಮಾಡಿಕೊಳ್ಳಲು ಮತದಾರರ ಸಹಾಯವಾಣಿ ಆ್ಯಪ್ ಬಳಸಿ ಪ್ರತಿ ಮತದಾರನು ಸ್ವಯಂ ಪರಿಶೀಲನೆ ಮಾಡಿಕೊಳ್ಳುವ ಅವಕಾಶವನ್ನು ಭಾರತ ಚುನಾವಣಾ ಆಯೋಗ ಕಲ್ಪಿಸಿದ್ದು, ಈ ಕುರಿತಂತೆ ಕಾಲೇಜುಗಳಲ್ಲಿ ಜಾಗೃತಿಮೂಡಿಸುವಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.
ನಗರದ ಪದವಿಪೂರ್ವ ಕಾಲೇಜು ಶಿಕ್ಷಣ ಭವನದಲ್ಲಿ ಗುರುವಾರ ಆಯೋಜಿಸಿದ ಮತದಾರ ಪಟ್ಟಿ ಪರಿಷ್ಕರಣೆ ಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಕುಟುಂಬ ಹಾಗೂ ಹಳ್ಳಿಗಳಲ್ಲಿ ಈ ಕುರಿತಂತೆ ಜಾಗೃತಿ ಮೂಡಿಸಿ, ಪ್ರತಿ ಮತದಾರರ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳುವುದಲ್ಲದೇ ತಪ್ಪಾಗಿದ್ದರೆ ಪರಿಷ್ಕರಣೆಗೆ ಅವಕಾಶವಿರುವ ಕುರಿತಂತೆ ಮನವರಿಕೆ ಮಾಡಿಕೊಟ್ಟು
ಲೋಪರಹಿತ ಮತದಾರರ ಪಟ್ಟಿ ಸಿದ್ಧವಾಗಲು ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು. ಪ್ರತಿ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಕ್ಲಬ್ಗಳನ್ನು ಸಕ್ರಿಯಗೊಳಿಸಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಜತೆಗೆ ಜಿಲ್ಲೆಯ ಎಲ್ಲ ಕಾಲೇಜು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬಳಸಿ ಮತದಾರರ ಪಟ್ಟಿಯಲ್ಲಿ ಪರಿಶೀಲನೆ ಮಾಡಿಕೊಳ್ಳಲು ಸೂಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜು ಪ್ರಾಚಾರ್ಯರಿಗೆ ತಿಳಿಸಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪೀರಜಾದೆ, ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲ್ವಾರ, ಜಿಪಂ ಸಹಾಯಕ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ, ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಶಾಕೀರ್ ಅಹ್ಮದ್ ಇದ್ದರು.