ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧತೆ
ಐದು ಸಾವಿರ ಜನರಿಗೆ ಆಸನ ವ್ಯವಸ್ಥೆಗಣ್ಯರು-ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ
Team Udayavani, Nov 18, 2019, 1:42 PM IST
ಕಲಬುರಗಿ: ಇದೇ ನವೆಂಬರ್ 22ರಂದು ಇಲ್ಲಿನ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು, ಪೂರ್ವ ಸಿದ್ಧತೆ ಭರದಿಂದ ಸಾಗಿದೆ.
ಮುಖ್ಯಮಂತ್ರಿಗಳು ನವೆಂಬರ್ 22ರಂದು ಮಧ್ಯಾಹ್ನ 1:35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆ ವಿಮಾನದ ಮೂಲಕ ಆಗಮಿಸಿ ಉದ್ಘಾಟನೆ ನೆರವೇರಿಸುವರು.
ಉದ್ಘಾಟನೆ ಸಮಾರಂಭ ಐತಿಹಾಸಿಕವಾಗಿ ನೆರವೇರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು, ಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ ಐದು ಸಾವಿರ ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಉದ್ಘಾಟನೆ ನಂತರ ಸಮಾರಂಭ ಉದ್ದೇಶಿಸಿ ಮುಖ್ಯಮಂತ್ರಿ ಭಾಷಮಾಡಲಿದ್ದಾರೆ.
ಕೇಂದ್ರ ವಿಮಾನಯಾನ ಸಚಿವರು, ಡಿಸಿಎಂ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಇತರರು ಪಾಲ್ಗೊಳ್ಳುವರು.
ಸಿದ್ಧತೆ ಪರಿಶೀಲನೆ: ವಿಮಾನ ನಿಲ್ದಾಣ ಉದ್ಘಾಟನೆ ಸಿದ್ಧತೆಯನ್ನು ಕಲಬುರಗಿ ಜಿಲ್ಲಾ ಧಿಕಾರಿ ಬಿ. ಶರತ್ ರವಿವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರುಗಡೆ ನಡೆಯುವ ಉದ್ಘಾಟನೆ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಅವರು, ಮುಖ್ಯಮಂತ್ರಿಗಳು, ಸಚಿವರು, ಜನಪ್ರತಿನಿ ಧಿಗಳು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 5000ಕ್ಕೂ ಹೆಚ್ಚಿನ ಜನರು ಸೇರುವುದರಿಂದ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ವೇದಿಕೆ ನೆಲವನ್ನು ಸಂಪೂರ್ಣ ಸಮತಳದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕು. ವಿಮಾನ ನಿಲ್ದಾಣ ಆವರಣದ ಸಂಪೂರ್ಣ ಸ್ವತ್ಛತಾ ಕಾರ್ಯಕ್ಕೆ ಮಹಾನಗರ ಪಾಲಿಕೆ ಸಹಕರಿಸಬೇಕು. ಎಲ್ಲಿಯೂ ಪ್ಲಾಸ್ಟಿಕ್ ಬಳಸದಂತೆ ಕಟ್ಟೆಚ್ಚರ ವಹಿಸಬೇಕು. ಅಲ್ಲಲ್ಲಿ ಗಿಡ-ಮರಗಳನ್ನು ನೆಡಬೇಕು ಮತ್ತು ಸೌಂದರ್ಯೀಕರಣ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೂಕ್ತ ಭದ್ರತೆ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ವೇದಿಕೆ ಸ್ಥಳಕ್ಕೆ ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಪ್ರವೇಶವಕಾಶ ನೀಡಬೇಕು. ನವೆಂಬರ್ 22ರಿಂದ ಪ್ರಯಾಣಿಕರ ವಿಮಾನಗಳ ಸಂಚಾರ ಆರಂಭವಾಗುವುದರಿಂದ ಅಂದು ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ನಿಂದ ಆಗಮಿಸುವ ಪ್ರಯಾಣಿಕರ ಆಗಮನ, ನಿರ್ಗಮನ ತಪಾಸಣೆ ಕೈಗೊಳ್ಳಬೇಕು. ವಿಮಾನ ಲ್ಯಾಂಡಿಂಗ್ ಮತ್ತು ವೇದಿಕೆ ಸ್ಥಳದಲ್ಲಿ ಅಗ್ನಿಶಾಮಕ ಸೇವೆ ಹಾಗೂ 108 ಅಂಬುಲೆನ್ಸ್ ಸೇವೆ ಕಲ್ಪಿಸಬೇಕೆಂದರು. ವಿಮಾನ ನಿಲ್ದಾಣವನ್ನು ಎಎಐಗೆ ಹಸ್ತಾಂತರ ಮಾಡಿರುವುದರಿಂದ ಅಂದು ತಪಾಸಣೆ, ಭದ್ರತಾ ವ್ಯವಸ್ಥೆ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕು ಎಂದು ಶರತ್ ಬಿ. ಅವರು ನಿಲ್ದಾಣದ ಸಹಾಯಕ ಮಾನ್ಯೇಜರ್ ಶ್ರೀಕಾಂತಗೆ ಸೂಚಿಸಿದರು.
ಕಲಬುರಗಿ ವಿಮಾನ ನಿಲ್ದಾಣದ ಕೆಎಸ್ಎಸ್ಐಡಿಸಿ ನಿರ್ದೇಶಕ ಸುಶೀಲಕುಮಾರ ಶ್ರೀವಾಸ್ತವ ವಿಮಾನ ನಿಲ್ದಾಣ ಉದ್ಘಾಟನೆ ಕುರಿತು ಕೈಗೊಳ್ಳಲಾಗುತ್ತಿರುವ ಪೂರ್ವಸಿದ್ಧತೆಗಳ ಕುರಿತು ಜಿಲ್ಲಾಧಿ ಕಾರಿಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಎಸ್.ಇ. ಲಕ್ಕಪ್ಪ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ