ಕಲಬುರಗಿ: ಶಂಕಿತ ಡೆಂಘೀಗೆ ಏಳು ಸಾವು
Team Udayavani, Nov 14, 2019, 12:12 PM IST
ರಂಗಪ್ಪ ಗಧಾರ
ಕಲಬುರಗಿ: ಜಿಲ್ಲಾದ್ಯಂತ ಕಳೆದ ಮೂರು ತಿಂಗಳಿಂದ ಸಾಂಕ್ರಾಮಿಕ ರೋಗಗಳ ಆರ್ಭಟ ಹೆಚ್ಚಾಗಿದೆ. ಮಕ್ಕಳಿಂದ ಹಿಡಿದು ಯುವಕರು, ವಯೋವೃದ್ಧರು ಮಹಾಮಾರಿ ಡೆಂಘೀ ಜ್ವರ ಮತ್ತು ಚಿಕೂನ್ ಗುನ್ಯಾ ರೋಗಕ್ಕೆ ತುತ್ತಾಗಿ, ಬಳಲುತ್ತಿದ್ದಾರೆ. ಅಕ್ಟೋಬರ್ನಿಂದ ಇದುವರೆಗೆ ಶಂಕಿತ ಡೆಂಘೀ ಜ್ವರಕ್ಕೆ ಏಳು ಜನರು ಬಲಿಯಾಗಿದ್ದಾರೆ.
ತಾಲೂಕು ಕೇಂದ್ರಗಳಿಂದ ಹೆಚ್ಚಾಗಿ ಮಹಾನಗರ ವ್ಯಾಪ್ತಿಯಲ್ಲಿ ಮಾರಣಾಂತಿಕ ಡೆಂಘೀ ಜ್ವರ ಉಲ್ಬಣಗೊಂಡಿದೆ. ಜಿಲ್ಲಾಸ್ಪತ್ರೆ ಮತ್ತು ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ಡೆಂಘೀ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರ ಮತ್ತು ಬೆಂಗಳೂರು ಆಸ್ಪತ್ರೆಗಳತ್ತ ರೋಗಿಗಳು ಮುಖ ಮಾಡುವಂತೆ ಆಗಿದೆ.
ಏಳು ಶಂಕಿತರ ಸಾವು: ಜಿಲ್ಲೆಯಲ್ಲಿ ಪ್ರಸ್ತಕ ವರ್ಷದ ಆರಂಭದಿಂದ ಇದುವರೆಗೆ (ನ.12ಕ್ಕೆ) 353 ಡೆಂಘೀ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 37 ಹೊರ ಜಿಲ್ಲೆಗಳ ರೋಗಿಗಳು ಸೇರಿದ್ದಾರೆ. ಆಘಾತಕಾರಿ ಅಂಶವೆಂದರೆ ಶಂಕಿತ ಡೆಂಘೀ ಜ್ವರದಿಂದ ಏಳು ಜನರು ಮೃತಪಟ್ಟಿದ್ದಾರೆ. ಇದರಲ್ಲಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಐವರು ಮೃತಪಟ್ಟಿದ್ದರೆ, ಮತ್ತಿಬ್ಬರು ಸೊಲ್ಲಾಪುರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಕ್ಟೋಬರ್ ತಿಂಗಳಿಂದ ಇತ್ತೀಚೆಗೆ ಏಳು ಸಾವುಗಳು ಸಂಭವಿಸಿದ್ದು, ರೋಗ ಉಲ್ಬಣಕ್ಕೆ ಸಾಕ್ಷಿಯಾಗಿದೆ. ಇದರ ಬೆನ್ನಲ್ಲೇ ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೂಂದು ಸಾವಿನ ವರದಿಯಾಗಿದೆ. ಶಂಕಿತ ಡೆಂಘೀಯಿಂದ 18 ವರ್ಷದ ಯುವತಿ ಮೃತಪಟ್ಟಿದ್ದು, ಆಕೆಯನ್ನು ಮೊದಲು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಎರಡು ಖಾಸಗಿ ಆಸ್ಪತ್ರೆಗಳಿಗೆ ಸುತ್ತಿ, ಸೋಮವಾರ ರಾತ್ರಿ ಮತ್ತೂಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಮಂಗಳವಾರ ಬೆಳಗ್ಗೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಹೆಚ್ಚಿದ ಆತಂಕ: ಜನವರಿ ತಿಂಗಳಿಂದಲೇ ಡೆಂಘೀ ಜ್ವರ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿವೆ. ಆಗಸ್ಟ್ನಿಂದ ಜನರಲ್ಲಿ ಈ ರೋಗಗಳು ಹೆಚ್ಚಿನ ಆತಂಕ ಸೃಷ್ಟಿಸಿವೆ. ಮಹಾನಗರ ಮಾತ್ರವಲ್ಲದೇ ಜಿಲ್ಲೆಯ ಅನೇಕ ಭಾಗಗಳಲ್ಲಿ ಡೆಂಘೀ ಜ್ವರ ಜನರನ್ನು ಬಾಧಿಸುತ್ತಿದೆ. ಆದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ರೋಗಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ.
ಜಿಲ್ಲಾಸ್ಪತ್ರೆ ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳು ಖಾಸಗಿ ಆಸ್ಪತ್ರೆ ಹಾಗೂ ಹೊರ ಜಿಲ್ಲೆಗಳತ್ತ ಮುಖ ಮಾಡುವಂತೆ ಆಗಿದೆ. ಇದನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸರಿಯಾದ ಸಮಯಕ್ಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಮಾನವ ಹಕ್ಕುಗಳ ಹೋರಾಟಗಾರ ರಿಯಾಜುದ್ದೀನ್ ಅಸಮಾಧಾನ ಹೊರ ಹಾಕಿದ್ದಾರೆ.
ಡೆಂಘೀ ಜ್ವರ ಹಾಗೂ ಚಿಕೂನ್ ಗುನ್ಯಾ ಹತೋಟಿಗೆ ತರುವುದು ನಮ್ಮ ಕೈಯಲ್ಲೇ ಇದೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿ ಇಟ್ಟುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್