ಭಾಗಮಂಡಲ: ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ
Team Udayavani, Jun 23, 2019, 5:09 AM IST
ಮಡಿಕೇರಿ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಶುಕ್ರವಾರ ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.
ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಹಾಗೂ ಪೊಲೀಸ್ ತಂಡಗಳಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಎದುರಾಗುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ವಿವರಿಸಿದರು.
ಮಹಾಮಳೆಯಾದರೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದೇ ಸಂದರ್ಭ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.