ಪೆಟ್ರೋಲ್ ಬಾಂಬ್ ಸಂಚು ಪ್ರಕರಣ: ಆರೋಪಿಗಳಿಗೆ ಜಾಮೀನು
Team Udayavani, Oct 17, 2022, 6:45 AM IST
ಮಡಿಕೇರಿ: ಮಡಿಕೇರಿ ಸೇರಿದಂತೆ ವಿವಿಧೆಡೆ ಪೆಟ್ರೋಲ್ ಬಾಂಬ್ ಸ್ಫೋಟಿಸುವ ಕುರಿತು ಮಲೆಯಾಳ ಭಾಷೆಯಲ್ಲಿ ಮೊಬೈಲ್ ಸಂಭಾಷಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಶೇಷಪ್ಪ ರೈ ಅವರು ನೀಡಿದ ದೂರಿನ ಹಿನ್ನೆಲೆ ನಗರಸಭಾ ಸದಸ್ಯ ಜೆಡಿಎಸ್ನ ಮುಸ್ತಫ ಹಾಗೂ ಬೆಟ್ಟಗೇರಿಯ ಉದ್ಯಮಿ ಅಬ್ದುಲ್ಲ ಅವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶನಿವಾರ ಬಂಧನಕ್ಕೊಳಗಾಗಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ರವಿವಾರ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಆಡಿಯೋ ವೈರಲ್ ಆದ ಕುರಿತು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳಕ್ಕೂ ಮಾಹಿತಿ
ಈ ಪ್ರಕರಣವನ್ನು ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೂ ಮಾಹಿತಿ ನೀಡಲಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ವೈರಲ್ ಪ್ರಕರಣದಲ್ಲಿ ಅವರ ಮನಸ್ಥಿತಿ ಆಶ್ಚರ್ಯ ಮತ್ತು ಆತಂಕವನ್ನು ಉಂಟು ಮಾಡಿದೆ. ಕೊಡಗಿನಲ್ಲಿ ದೇಶದ್ರೋಹಿ ಶಕ್ತಿಗಳು ಚಟುವಟಿಕೆ ಯಲ್ಲಿದ್ದು, ಕೇರಳದೊಂದಿಗೆ ನಂಟು ಹೊಂದಿರುವ ಬಗ್ಗೆ ಸಂಶಯವಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಯಾಗಬೇಕು ಎಂದು ಆಗ್ರಹಿಸಿದರು.