ಮಳೆಗೆ ತತ್ತರಿಸಿದ ಕೊಡಗು: ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು; ಸಂಚಾರ ಅಸ್ತವ್ಯಸ್ತ
Team Udayavani, Jul 14, 2022, 12:15 PM IST
ಮಡಿಕೇರಿ: ಕಳೆದ 24 ಗಂಟೆಗಳಿoದ ಸುರಿಯುತ್ತಿರುವ ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆ ತತ್ತರಿಸಿ ಹೋಗಿದೆ. ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಾಲು ಸಾಲು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳಿಗೂ ಹಾನಿಯಾಗಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮುಖ್ಯ ರಸ್ತೆಗಳಿಗೆ ಬೃಹತ್ ಮರಗಳು ಬಿದ್ದಿದ್ದು, ಅರಣ್ಯ ಇಲಾಖೆ, ಸೆಸ್ಕ್ ಇಲಾಖೆ, ಎನ್ಡಿಆರ್ಎಫ್, ಗ್ರಾ.ಪಂ ಸಿಬ್ಬಂದಿಗಳು ಸಾರ್ವಜನಿಕರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎಲ್ಲಾ ರಸ್ತೆಗಳಲ್ಲೂ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಗಾಳಿಬೀಡು ರಸ್ತೆ ಜಂಕ್ಷನ್ ಬಳಿ ಬೃಹತ್ ಗಾತ್ರದ ಮರಗಳು ಬಿದ್ದಿವೆ. ಮಡಿಕೇರಿ- ಸೋಮವಾರಪೇಟೆ ರಸ್ತೆ ಹಾಗೂ ಶನಿವಾರಸಂತೆ ವ್ಯಾಪ್ತಿಯಲ್ಲಿ ಎರಡು ಮರಗಳು, ಭಾಗಮಂಡಲ, ತಲಕಾವೇರಿ ರಸ್ತೆಯಲ್ಲೂ ಮರಗಳು ಧರೆಗುರುಳಿವೆ. ಮರಗಳು ಬಿದ್ದು ಹಲವು ಮನೆಗಳಿಗೆ ಹಾನಿಯಾಗಿದೆ.
ಗಾಳಿಬೀಡು ಗ್ರಾಮ, ಮಡಿಕೇರಿಯ ಗದ್ದಿಗೆ, ಕನ್ನಂಡ ಬಾಣೆ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳು ಬಿದ್ದಿವೆ. ಪೆರಾಜೆ ಗ್ರಾಮದ ಕುಂದಲ್ಪಾಡಿ ಪ್ರದೇಶದಲ್ಲಿ ಗುಡ್ಡ ಕುಸಿದು ಟ್ರಾನ್ಸ್ ಫಾರ್ಮರ್ ಮುರಿದು ಬಿದ್ದಿದ್ದು, ಬೇರೆ ಮಾರ್ಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನ ಮುಂದುವರೆದಿದೆ.
ಇದನ್ನೂ ಓದಿ: ಮಂಗಳೂರು: ಗಾಂಜಾ ವ್ಯಸನ ಮಾಡುತ್ತಿದ್ದ 7 ವಿದ್ಯಾರ್ಥಿಗಳ ಬಂಧನ
ಕಾವೇರಿ ಸೇರಿದಂತೆ ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇದ್ದು, ನದಿ ತೀರ ಹಾಗೂ ಬೆಟ್ಟ ಗುಡ್ಡಗಳ ವ್ಯಾಪ್ತಿಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.