ಪ್ರವಾಸೋದ್ಯಮ ಮೂಲಕ ಉದ್ಯೋಗ ಸೃಷ್ಟಿಸಲು ಮನವಿ
Team Udayavani, Sep 14, 2019, 5:10 AM IST
ಮಡಿಕೇರಿ:ಸುಂದರ ಹಸಿರ ಪರಿಸರದ ಕಾವೇರಿ ನಾಡು ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಅವಕಾಶವಿದ್ದು, ಇದಕ್ಕೆ ರಾಜ್ಯ ಸರಕಾರ ಸಹಕಾರ ನೀಡಬೇಕು. ಪ್ರವಾಸೋದ್ಯಮದ ಮೂಲಕವೇ ಸ್ಥಳೀಯ ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಬೇಕೆಂದು ಕೊಡಗು ಟೂರಿಸಂ ಅಸೋಸಿಯೇಷನ್ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಅಸೋಸಿಯೇಷನ್ನ ಪ್ರಮುಖರು ಜನರಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿ ಹುಟ್ಟುವ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ಮತ್ತು ವನ್ಯಜೀವಿಗಳ ದಾಳಿಯಿಂದ ತೋಟಗಾರಿಕೆ ಹಾಗೂ ಕೃಷಿ ಚಟುವಟಿಕೆಗಳು ಕುಂಟಿತಗೊಂಡಿದೆ. ಅತಂತ್ರ ಸ್ಥಿತಿಯಲ್ಲಿರುವ ಇಲ್ಲಿನ ಯುವ ಸಮೂಹ ಪ್ರವಾಸೋದ್ಯಮ ಕ್ಷೇತ್ರದ ಮೂಲಕವೇ ಉದ್ಯೋಗವನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗಮನ ಸೆಳೆದರು.