ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ: ಮಹೇಶ್
Team Udayavani, May 13, 2019, 6:30 AM IST
ಮಡಿಕೇರಿ: ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂಬಂಧಿಸಿದಂತೆ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಉಪ ಸಮಿತಿಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಕಟ್ಟು ನಿಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಸ್ಥಾನ ಬಿಟ್ಟು ತೆರಳದಿರಿ
ಸದ್ಯದಲ್ಲೆ ಮುಂಗಾರು ಆರಂಭವಾ ಗುವುದರಿಂದ ಯಾರೂ ಸಹ ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ತುರ್ತು ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಯವರ ಅನುಮತಿ ಪಡೆದು ಹೊರಡಬೇಕು ಎಂದರು.
ಅಧಿಕಾರಿಗಳು ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರನ್ನು ನೋಯಿಸುವುದು, ತೊಂದರೆ ನೀಡುವುದು ಕೇಳಿ ಬಂದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ಎಚ್ಚರಿಸಿದರು.
ಈಗಾಗಲೇ ಜಿಲ್ಲಾಡಳಿತ ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಸಾಕಷ್ಟು ಕುಟುಂಬಗಳಿಗೆ ಪರಿಹಾರ ವಿತರಿಸಿದೆ. ಜಮ್ಮಾ ಹಾಗೂ ಬಾಣೆ ಭೂಮಿಗೆ ಸಂಬಂಧಿಸಿದಂತೆ ಇನ್ನೂ ಕೆಲವು ಕುಟುಂಬಗಳಿಗೆ ಪರಿಹಾರ ನೀಡಬೇಕಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ನೊಂದ ಎಲ್ಲ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ನಗರದಲ್ಲಿ ಒಳಚರಂಡಿ ನಿರ್ಮಾಣ ದಿಂದಾಗಿ ರಸ್ತೆ ಹದಗೆಟ್ಟಿದೆ ಎಂದು ದೂರುಗಳು ಕೇಳಿ ಬರುತ್ತಿದ್ದು, ಕೂಡಲೇ ಇದನ್ನು ಸರಿಪಡಿಸಬೇಕು. ಮಳೆಗಾಲ ಮುಗಿಯುವವರೆಗೆ ರಸ್ತೆ ಅಗೆಯಲು ಹೋಗಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರಕೃತಿ ವಿಕೋಪ ಹಾಗೂ ಬರ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ. ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸೂಚನೆ
ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗ, ಪಿಎಂಜಿಎಸ್ವೈ, ರಾಷ್ಟ್ರೀಯ ಹೆದ್ದಾರಿ ವಿಭಾಗ, ಸಣ್ಣ ನೀರಾವರಿ ಹಾಗೂ ಬೃಹತ್ ನೀರಾವರಿ ಮತ್ತಿತರ ಎಂಜಿನಿಯರಿಂಗ್ ವಿಭಾಗದ ಇಲಾಖೆಗಳು ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು.