ಕಾಂಗ್ರೆಸ್ ಸದಸ್ಯತ್ವ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿದೆ :ಸರ್ವೇಶ್
Team Udayavani, Mar 26, 2022, 5:53 PM IST
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಕಾರ್ಯ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿದೆ. ಒಬ್ಬ ವ್ಯಕ್ತಿಯಿಂದಲ್ಲ. ಬಿಜೆಪಿ ಸರಕಾರದ ವಿರುದ್ಧ ಜನಸಾಮಾನ್ಯರು ರೋಸಿ ಹೋಗಿದ್ದು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯಲು ಉತ್ಸುಕರಾಗಿದ್ದಾರೆಂದು ಯುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಪುತ್ರ ಸರ್ವೇಶ್ ಮಾಂತ ಗೊಂಡ ತಿಳಿಸಿದ್ದಾರೆ.
ಅವರು ತಮ್ಮ ನಿವಾಸದಲ್ಲಿ ಉದಯವಾಣಿ ಜತೆ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಸದಸ್ಯತ್ವ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ಸಂಸದ ಶಿವರಾಮಗೌಡ ಹಾಗೂ ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಹಾಗೂ ಲಲಿತಾರಾಣಿ ಶ್ರೀರಂಗದೇವರಾಯಲು ಸೇರಿ ಬ್ಲಾಕ್ ಅಧ್ಯಕ್ಷರು, ಜಿ.ಪಂ.ತಾ.ಪಂ ಮಾಜಿ ಸದಸ್ಯರು ನಗರಸಭೆ ಸದಸ್ಯರುಗಳ ಇವರ ಸಾಮೂಹಿಕ ನಾಯಕತ್ವದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿರಿಸಿದ್ದು ಉಳಿದ ಅವಧಿಯಲ್ಲಿ ಗಂಗಾವತಿ ಕ್ಷೇತ್ರದಲ್ಲಿ ಸದಸ್ಯತ್ವ ಕಾರ್ಯ ಪೂರ್ಣಗೊಳ್ಳಲಿದೆ. ಬಿಜೆಪಿಯವರು ಜಾತಿ ಧರ್ಮದ ಹೆಸರಿನಲ್ಲಿ ರಾಜಕೀಯ ಅಸ್ತಿತ್ವ ಕಂಡು ಕೊಂಡಿದ್ದು ಅಭಿವೃದ್ಧಿ ಕಾರ್ಯಗಳು ಅವರಿಗೆ ಗೊತ್ತಿಲ್ಲ. ಮುಂಬರುವ ದಿನಗಳಲ್ಲಿ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಸೇರಿದಂತೆ ಸರ್ವ ಜಾತಿಗಳ ಸಮಗ್ರ ಅಭಿವೃದ್ಧಿ ಬಯಸುವವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸ್ವತಹ ಡಿ.ಕೆ.ಶಿವಕುಮಾರ ಅವರು ಶ್ರೀನಾಥ ಧಣಿಯವರಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಕಾಂಗ್ರೆಸ್ ದೃಷ್ಠಿಯಿಂದ ಉತ್ತಮ ಬೆಳವಣಿಗೆ. ಈ ಹಿಂದಿನ ಕಾಂಗ್ರೆಸ್ ಸರಕಾರದ ಯೋಜನೆಗಳು ಇಂದಿಗೂ ಮಾದರಿಯಾಗಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಹಿಂದುಳಿದ ಘಟಕದ ಮುಖಂಡ ಐಲಿ ಬಸವರಾಜ, ಅಶೋಕ ಸೇರಿ ಅನೇಕರಿದ್ದರು.