ಡ್ರಗ್ಸ್ ದಂಧೆ ಕಡಿವಾಣಕ್ಕೆ ಸಹಿ ಸಂಗ್ರಹ ಅಭಿಯಾನ
Team Udayavani, Sep 9, 2020, 7:46 PM IST
ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನಿಂದ ನಗರದ ಅಶೋಕ ವೃತ್ತದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿ ಸರ್ಕಾರದ ಗಮನ ಸೆಳೆಯಿತು.
ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಈ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಹಾಗಾಗಿ ಸರ್ಕಾರವು ಅಂತಹ ದಂಧೆಕೋರರನ್ನು ಕೂಡಲೇ ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಹಿ ಸಂಗ್ರಹ ಅಭಿಯಾನ ನಡೆಸಿ ಸರ್ಕಾರದ ಗಮನ ಸೆಳೆಯಿತು.
ಈ ವೇಳೆ ಮುಖಂಡರಾದ ಮೌನೇಶ ಕಿನ್ನಾಳ, ರವಿಚಂದ್ರ ಮಾಲಿಪಾಟೀಲ್, ಮನೋಜ್, ಶಶಾಂಕ, ಶ್ರೀಶೈಲ್, ದೀಪಕ್ ಕುಮಾರ, ರಾಕೇಶ ಪಾನಘಂಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.