ಬೆಳ್ಳಂಬೆಳಗ್ಗೆ ಪುಟ್ಟರಾಜುಗೆ ಐಟಿ ಶಾಕ್
Team Udayavani, Mar 29, 2019, 1:07 PM IST
ಮಂಡ್ಯ/ಪಾಂಡವಪುರ: ರಾಜ್ಯದಲ್ಲಿ ಐಟಿ ದಾಳಿ ನಡೆಯುವ ಬಗ್ಗೆ ಸಿಎಂ ಸುಳಿವು ಕೊಟ್ಟ ಬೆನ್ನಲ್ಲೇ ಮಂಡ್ಯ ಸೇರಿದಂತೆ ಹಲವೆಡೆ ಗುರುವಾರ ಬೆಳ್ಳಂಬೆಳಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬರೀಶ್ ಪತ್ನಿ ಸುಮಲತಾ ಹಾಗೂ ಸಿಎಂ ಪುತ್ರ ನಿಖೀಲ್ ಸ್ಪರ್ಧೆಯಿಂದ ರಣಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸಿ.ಎಸ್.ಪುಟ್ಟರಾಜುಗೆ ಐಟಿ ಬಿಸಿ ತಟ್ಟಿದೆ.
ಗುರುವಾರ ಮುಂಜಾನೆಯೇ ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಸೋದರ ಚಿಕ್ಕರಾಮೇಗೌಡರ ಪುತ್ರ ಜಿಪಂ ಸದಸ್ಯ ಸಿ.ಅಶೋಕ್, ಚಿನಕುರಳಿ ಗ್ರಾಪಂ ಸದಸ್ಯ ಸಿ.ಶಿವಕುಮಾರ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಿಢೀರನೆ ದಾಳಿ ನಡೆಸಿದ್ದಾರೆ. ಪಾಂಡವಪುರ ತಾಲೂಕು ಚಿನಕುರಳಿ ಗ್ರಾಮದಲ್ಲಿನ ಸಿ.ಅಶೋಕ್ ನಿವಾಸ ಹಾಗೂ ಮೈಸೂರಿನ ವಿಜಯನಗರದಲ್ಲಿನ ಸಿ.ಶಿವಕುಮಾರ್ ಮನೆ ಮೇಲೆ ಸಿಆರ್ಪಿಎಫ್ ಸಿಬ್ಬಂದಿಯೊಂದಿಗೆ ಆದಾಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ನಾಲ್ಕು ಇನ್ನೋವಾ( ಕೆ ಎ 03 ಎಸಿ 2768, ಕೆ ಎ 02 ಎಸಿ 8081, ಕೆ ಎ 02 ಎಸಿ 0818, ಕೆ ಎ 50 ಎ 7269) ಕಾರ್ಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳ ತಂಡ ಈ ಎಲ್ಲಾ ಕಡೆ ದಾಳಿ ಮಾಡುವ ಮೂಲಕ ಮಾಹಿತಿ ಸಂಗ್ರಹಿಸಿತು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಅವರ ಸಹೋದರನ ಮಕ್ಕಳು ಒಟ್ಟಿಗೆ ನೆಲೆಸಿದ್ದು, ಎಲ್ಲಾ ವ್ಯವಹಾರಗಳನ್ನು ಜೊತೆಯಾಗಿಯೇ ನಡೆಸುತ್ತಾ ಅಕ್ಕ-ಪಕ್ಕದ ಮನೆಗಳಲ್ಲೇ ನೆಲೆಸಿದ್ದಾರೆ. ಅಧಿಕಾರಿಗಳು ಚಿನಕುರಳಿ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಸಚಿವ ಪುಟ್ಟರಾಜು ಹಾಗೂ ಸಿ.ಅಶೋಕ್ ಮನೆಯಲ್ಲೇ ಇದ್ದರು.
ಹೀಗಾಗಿ ಐಟಿ ಅಧಿಕಾರಿಗಳು ಪ್ರತ್ಯೇಕ ತಂಡಗಳಲ್ಲಿ ಮುಂಜಾನೆ 4.30ರ ವೇಳೆಗೆ ಚಿನಕುರಳಿ ಹಾಗೂ ಮೈಸೂರಿನ ನಿವಾಸಗಳ ಎದುರು ಪ್ರತ್ಯಕ್ಷರಾಗಿದ್ದರು. ಈ ವೇಳೆ ಪ್ರಮುಖವಾಗಿ ಅಶೋಕ್ ಮತ್ತು ಶಿವಕುಮಾರ್ ಅವರ ಆದಾಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಲ್ಲದೆ, ಆಸ್ತಿ ಪ್ರಮಾಣದ ಬಗ್ಗೆ ಮಾಹಿತಿ ಪಡೆಯುವ ಉದ್ದೇಶದಿಂದ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದರು.
ವಿಚಾರಣೆಗೆ ಸಹಕಾರ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುವ ವೇಳೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನ ಊಟವನ್ನು ಹೊರಗಿನಿಂದಲೇ ತರಿಸಿಕೊಂಡು ಸೇವಿಸಿದ ಬಳಿಕ ವಿಚಾರಣೆ ಮುಂದುವರಿಸಿದರು. ವಿಚಾರಣೆ ಸಮಯದಲ್ಲಿ ಸಿ.ಅಶೋಕ್ ಅಧಿಕಾರಿಗಳು ಕೇಳಿದ ಮಾಹಿತಿಯನ್ನು ನೀಡುವ ಮೂಲಕ ವಿಚಾರಣೆಗೆ ಸಹಕರಿಸಿದರು. ಇದೇ ವೇಳೆ ಮೈಸೂರಿನ ಮನೆಯಲ್ಲಿದ್ದ ಅಶೋಕ್ ಅವರ ಪತ್ನಿ ವಿಜಯ ಅವರನ್ನು ಚಿನಕುರಳಿ ಮನೆಗೆ ಕರೆಸಿಕೊಂಡು ಐಟಿ ಅಧಿಕಾರಿಗಳು ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು.
ಮಧ್ಯಾಹ್ನ 3ರ ಸಮಯದಲ್ಲಿ ಇಬ್ಬರು ಅಧಿಕಾರಿಗಳು ಮನೆಯಿಂದ ಹೊರಗೆ ಬಂದು ಬ್ಯಾಂಕ್ ಖಾತೆಗಳ ಪರಿಶೀಲನೆಗೆ ತೆರಳಿದರು. ಈ ವೇಳೆ ಅಧಿಕಾರಿಗಳು ನೀಲಿ ಬಣ್ಣದ ಕವರ್ನಲ್ಲಿ ಹಲವು ದಾಖಲೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು. ಉಳಿದ ಅಧಿಕಾರಿಗಳು ಸಂಜೆಯಾದರೂ ಅಶೋಕ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆಯನ್ನು ಮುಂದುವರೆದಿತ್ತು.
ನೆರೆದಿದ್ದ ಜನಸಾಗರ: ಜಿಲ್ಲಾ ಸಚಿವ ಪುಟ್ಟರಾಜು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿದ್ದರಿಂದ ಅಪಾರ ಸಂಖ್ಯೆಯ ಜನಸ್ತೋಮ ಪುಟ್ಟರಾಜು ನಿವಾಸದ ಬಳಿ ಜಮಾಯಿಸಿತ್ತು. ನಂತರ ಅಶೋಕ್ ಮನೆಯ ಮೇಲೆ ದಾಳಿ ನಡೆಸಿರುವ ವಿಷಯ ತಿಳಿದು ಅಲ್ಲಿಗೆ ದೌಡಾಯಿಸಿದರು. ಜೆಡಿಎಸ್ ಕಾರ್ಯಕರ್ತರು, ಪುಟ್ಟರಾಜು ಅವರ ಬೆಂಬಲಿಗರು, ಅಭಿಮಾನಿಗಳು ಚಿನಕುರಳಿಗೆ ಆಗಮಿಸಿ ಪುಟ್ಟರಾಜು ಅವರ ಬೆಂಬಲಕ್ಕೆ ನಿಂತರು. ನಿಮ್ಮೊಡನೆ ನಾವಿದ್ದೇವೆ. ಅಧಿಕಾರಿಗಳ ದಾಳಿಯಿಂದ ಆತ್ಮಸ್ಥೈರ್ಯ ಕಳೆದುಕೊಳ್ಳದಿರುವಂತೆ ಧೈರ್ಯ ಹೇಳಿದರು.
ದಾಳಿಯ ಹಿಂದಿನ ಉದ್ದೇಶವೇನು?: ಸಚಿವ ಸಿ.ಎಸ್.ಪುಟ್ಟರಾಜು ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಪ್ತರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಕುಮಾರಸ್ವಾಮಿ ಪುತ್ರ ನಿಖೀಲ್ ಸ್ಪರ್ಧಿಸಿರುವ ಕಾರಣ ಚುನಾವಣಾ ಜವಾಬ್ದಾರಿಯನ್ನು ಅವರೇ ವಹಿಸಿಕೊಂಡಿದ್ದಾರೆ. ಪ್ರಚಾರ ಸಭೆ ಸೇರಿದಂತೆ ಚುನಾವಣಾ ಕಾರ್ಯತಂತ್ರಗಳನ್ನು ಸ್ವತಃ ಪುಟ್ಟರಾಜು ಅವರ ನೇತೃತ್ವದಲ್ಲೇ ನಡೆಸಲಾಗುತ್ತಿದೆ.
ಅಲ್ಲದೆ, ಪುಟ್ಟರಾಜು ಅವರಿಗೆ ಬೆಂಬಲವಾಗಿ ಸೋದರನ ಪುತ್ರರಾದ ಅಶೋಕ್ ಮತ್ತು ಶಿವಕುಮಾರ್ ನಿಂತು ಸಾಕಷ್ಟು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಚುನಾವಣಾ ವೆಚ್ಚಕ್ಕಾಗಿ ಸಚಿವ ಪುಟ್ಟರಾಜು ಮತ್ತು ಅವರ ಸಂಬಂಧಿಕರ ಮನೆಯಲ್ಲಿ ದೊಡ್ಡ ಮೊತ್ತದ ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಅನುಮಾನದೊಂದಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ