ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ಗುರುತಿಸಲು ಮನವಿ
Team Udayavani, Apr 9, 2021, 8:41 PM IST
ಹಲಗೂರು: ವರ್ತಕರು ಮತ್ತು ಸಾರ್ವಜನಿಕರ ಕುಂದು ಕೊರತೆ ಸಭೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆಯಿತು. ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟು ವ್ಯಾಪಾರ ಮಾಡುತ್ತಿರುವುದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ತುಂಬಾ ತೊಂದರೆ ಆಗುತ್ತಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳ ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಪಟ್ಟಣದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಬೇಕು. ಹಲಗೂರು ದೊಡ್ಡ ಹೋಬಳಿ ಕೇಂದ್ರ ಆಗಿದ್ದು, ಸರ್ಕಾರಿ ಆಸ್ಪತ್ರೆಗೆ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನೇಮಿಸಬೇಕು. ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಪಿಎಸ್ಐ ಮಾರುತಿ ತಮ್ಮಣ್ಣನವರ ಮಾತನಾಡಿ, ಸಮಾಜಘಾತುಕ ಕೆಲಸ ಮಾಡುವವರಿಗೆ ಸಾರ್ವಜನಿಕರು ಹೆದರುವ ಅಗತ್ಯವಿಲ್ಲ. ನನಗೆ ದೂರು ನೀಡಿ, ಗೌಪ್ಯವಾಗಿ ಇಡಲಾಗುವುದು ಎಂದರು.
ಸಾರ್ವಜನಿಕರ ಸಹಭಾಗಿತ್ವ ಇಲಾಖೆಗೆ ಮುಖ್ಯವಾಗಿದ್ದು, ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಗಳಾ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ರವೀಶ್, ಆನಂದ್, ವೀರೇಶ್, ಎಎಸ್ಐ ಚಂದ್ರಪ್ಪ ಸೇರಿದಂತೆ ಹಲವರು ಇದ್ದರು.