Mysore: ಮಗು ಮೇಲೆ 58 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ
Team Udayavani, Dec 13, 2023, 3:22 PM IST
ಮೈಸೂರು: ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 58 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವರ್ಷದ ಬಾಲಕಿ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣೇಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಣ್ಣೇಗೌಡ, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಹಾಗೂ ಅವರ ಕುಟುಂಬ ದವರಿಗೆ ಸಾಂತ್ವನ ಹೇಳಿದ್ದೇನೆ. ಬಾಲಕಿಯನ್ನು ಕಾನೂನು, ವೈದ್ಯಕೀಯ, ಸಮಾಲೋಚನೆ, ಆಹಾರ, ತಂಗಲು ವ್ಯವಸ್ಥೆ ಸೇರಿ ಒಂದು ಸೂರಿನಲ್ಲಿ ತಕ್ಷಣಕ್ಕೆ ಸ್ಪಂದಿಸುವ ಎಲ್ಲಾ ರೀತಿಯ ವ್ಯವಸ್ಥೆ ಇರುವ ಸಖೀ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಾಹಿತಿ ಮೇಲೆ ಕಾನೂನು ಕ್ರಮ: ತಾಯಿ ಮತ್ತು ಮಗುವಿನಿಂದ ಹೇಳಿಕೆ ಪಡೆಯಲಾಗಿದೆ. ಅವರು ನೀಡಿರುವ ಮಾಹಿತಿ ಪಡೆದು ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಮರಣದಂಡನೆ ಶಿಕ್ಷೆ ಕಾಯ್ದೆ ಜಾರಿಗೆ ಚಿಂತನೆ: ಪೋಕ್ಸೋ ಕಾಯ್ದೆ ಅಡಿ ಪ್ರಸ್ತುತ 20 ವರ್ಷ ಜೈಲು ಶಿಕ್ಷೆ ಇದ್ದು, ಸರ್ಕಾರದ ಜೊತೆ ಚರ್ಚಿಸಿ ಈ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾಯ್ದೆ ತರುವ ಆಲೋಚನೆ ಇದೆ. ಮುಂದಿನ ದಿನಗಳಲ್ಲಿ ಸರ್ಕಾರದ ಜೊತೆ ಚರ್ಚಿಸ ಲಾಗುವುದು ಎಂದು ತಿಳಿಸಿದರು.
18 ವರ್ಷದೊಳಗೆ ಮದುವೆ ಬೇಡ: ರಾಜ್ಯದಲ್ಲಿ ಬಾಲ್ಯವಿವಾಹಗಳಿಂದ ಬಾಲ ತಾಯಂದಿರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸಬೇಕು. ಈ ರೀತಿಯ ಪ್ರಕರಣಗಳಿಂದ ಮದುವೆಯಾದ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೆ ಇಲಾಖೆಯಿಂದ ಆಶ್ರಯ ನೀಡ ಲಾಗುವುದು. ಪುರುಷರಿಗೆ ಜೈಲು ಶಿಕ್ಷೆಯನ್ನು ನೀಡಲಾಗುತ್ತಿದೆ. ಒತ್ತಾಯ ಪೂರಕವಾಗಿ ಮಕ್ಕಳಿಗೆ ಮದುವೆ ಮಾಡಿಸಿ, ಜೈಲು ಶಿಕ್ಷೆ ಅನುಭವಿಸುವಂತೆ ಮಾಡಬೇಡಿ ಎಂದು ತಿಳಿಸಿದರು.
ಚೆಲುವಾಂಬ ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ರಾಜೇಂದ್ರಕುಮಾರ್, ಸಖೀ ಒಎಸ್ ಸೆಂಟರ್ ಆಡ ಳಿತಾಧಿಕಾರಿ ಸುಚಿತ್ರಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರ ಕುಮಾರ್, ಸಾಮಾಜ ಕಾರ್ಯಕರ್ತ ಬಿ.ಭಾಸ್ಕರ್, ಕೆಆರ್ ಎಸ್ ಠಾಣಾಧಿಕಾರಿ, ಇತರರು ಇದ್ದರು.
ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ:
ಮೈಸೂರು: ಕೆಆರ್ಎಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸೋಮವಾರ ಮಧ್ಯಾಹ್ನ 59 ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಕುಟುಂಬದವರು ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸದ್ದಾರೆ.
ಆರೋಪಿಯು ತನ್ನ ಮನೆಯ ಪಕ್ಕದಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಮನೆಯಲ್ಲಿ ಬಾಲಕಿ ಕಾಣದಿರುವುದನ್ನು ಕಂಡು ತಾಯಿ ಹುಡುಕಾಡಿದಾಗ ಆರೋಪಿ ಮನೆಯಲ್ಲಿ ಬಾಲಕಿ ಚೀರಿಕೊಂಡ ಶಬ್ದ ಕೇಳಿಬಂದಿದೆ.
ಕೂಡಲೇ ಸ್ಥಳೀಯರ ನೆರವಿನಿಂದ ಬಾಗಿಲು ಒಡೆದು ಒಳಹೋಗಿ ನೋಡಿದಾಗ ಬಾಲಕಿ ಬಿಟ್ಟು ಆರೋಪಿ ಪರಾರಿಯಾಗಿದ್ದ. ಕೂಡಲೇ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು.
ಮೈಸೂರು ಜಿಲ್ಲೆಯಲ್ಲಿ 10 ದಿನಗಳಲ್ಲಿ 10 ಪ್ರಕರಣ: ಮೈಸೂರು ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಲ್ಲಿ 10 ಪೋಕೊÕà ಪ್ರಕರಣ ದಾಖಲಾಗಿವೆ. ಇದು ಆತಂಕಕಾರಿ ಬೆಳವಣಿಗೆ.
ಚೆಲುವಾಂಬ ಆಸ್ಪತ್ರೆ ಆವರಣದಲ್ಲಿರುವ ಸಖೀ ವಿಭಾಗದಲ್ಲಿ 10 ಪ್ರಕರಣ ವರದಿಯಾಗಿದೆ. ಸಂತ್ರಸ್ತೆಯರಿಗೆ ಚಿಕಿತ್ಸೆ ಮತ್ತು ಆರೈಕೆ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣೇಗೌಡ ಹೇಳಿದರು.
ಈ ಹಿಂದೆ ಪೋಕೊÕà ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೂಲಕ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಂತಹ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆಯಿಂದ ಕೇಸ್ ದಾಖಲಿಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಜತೆಗೆ ಸಂತ್ರಸ್ತ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆರವು ನೀಡ ಲಾಗುತ್ತಿದೆ ಎಂದು ತಿಳಿಸಿದರು.