ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿರಲಿಲ್ಲ
Team Udayavani, Apr 17, 2018, 7:40 AM IST
ಮೈಸೂರು: “ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಾನು ಎಲ್ಲಿಯೂ ಹೇಳಿರಲಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, “ಅಲ್ಲಿನ ಜನ ನನ್ನನ್ನು ಭೇಟಿ ಮಾಡಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು ಅಷ್ಟೇ. ಇಷ್ಟು ಬಾರಿ ಚುನಾವಣೆ ಎದುರಿಸಿದ್ದೇನೆ,ಯಾವಾಗಲು ಎರಡು ಕ್ಷೇತ್ರಗಳಲ್ಲಿ ನಿಂತಿಲ್ಲ. ಅದೇ ರೀತಿ ಈ ಚುನಾವಣೆಯಲ್ಲೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದು, ಇದೇ 20ರಂದು ನಾಮಪತ್ರ ಸಲ್ಲಿಸಿದ ನಂತರ ರಾಜ್ಯ ಪ್ರವಾಸ ಮಾಡುತ್ತೇನೆ’ ಎಂದು ಹೇಳಿದರು.
ಸಚಿವ ಡಾ.ಎಚ್.ಸಿ.ಮಹದೇವಪ್ಪ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ. ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದರು, ಅವರ ಮನವೊಲಿಸಿ ಅವರಿಗೆ ತಿ.ನರಸೀಪುರ ಕ್ಷೇತ್ರದ ಟಿಕೆಟ್ ಕೊಡಿಸಿದ್ದೇನೆ. ಇನ್ನು ಅವರ ಪುತ್ರ ಸುನೀಲ್ ಬೋಸ್ ಟಿಕೆಟ್ಗಾಗಿ ಅರ್ಜಿ ಹಾಕಿದ್ದರು. ಅವರ ಜತೆಗೆ ಮಾತುಕತೆ ನಡೆಸಿ ಮುಂದೆ ಅವಕಾಶ ಮಾಡಿಕೊಡುವುದಾಗಿ ಹೇಳಿರುವುದಾಗಿ ತಿಳಿಸಿದರು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆಲವರಿಗೆ ಅಸಮಾಧಾನ ಉಂಟಾಗಿರುವುದು ನಿಜ. ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.