ಸರ್ಕಾರಿ ಶಾಲೆ ಅಭಿವೃದ್ಧಿಗೆ ಪೋಷಕರು ಸಹಕರಿಸಿ
Team Udayavani, Jan 6, 2019, 6:01 AM IST
ಹುಣಸೂರು: ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಸವಲತ್ತು ನೀಡಲಾಗುತ್ತಿದ್ದು, ಶಾಲೆಗಳ ಅಭಿವೃದ್ಧಿಗೆ ಶಿಕ್ಷಕರೊಂದಿಗೆ ಪೋಷಕರೂ ಕೈ ಜೋಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಕೋರಿದರು.
ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮೇನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಚ್.ಕೆ.ಭದ್ರಶೆಟ್ಟರು ನಿವೃತ್ತರಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ನಿವೃತ್ತಿ ನಂತರವೂ ನಿಮ್ಮ ಸುತ್ತಮುತ್ತಲಿನ ಮಕ್ಕಳಿಗೆ ವಿದ್ಯಾರ್ಜನೆ ಮಾಡುವ ಮೂಲಕ ಸಾರ್ಥಕ ಬದುಕು ನಡೆಸಬೇಕೆಂದರು.
ಶಿಕ್ಷಕರ ವೃತ್ತಿ ಪವಿತ್ರವಾದುದು. ಶಿಕ್ಷಕ ತಪ್ಪು ಮಾಡಿದರೆ ಮಕ್ಕಳ ಭವಿಷ್ಯವೇ ಅಂಧಃಪತನಕ್ಕಿಳಿಯಲಿದ್ದು, ಪ್ರತಿ ಶಿಕ್ಷಕರೂ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಬೆಳೆಸುವ ಜವಾಬ್ದಾರಿ ಹೊತ್ತು ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಇಂತಹವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಆರ್.ಮಹದೇವ್, ಉಪಾಧ್ಯಕ್ಷೆ ಕುಮಾರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂತೋಷ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಕುಮಾರ್, ಜೆಡಿಎಸ್ ಯುವ ಅಧ್ಯಕ್ಷ ಲೋಕೇಶ್, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.