ತಮಿಳುನಾಡಿಗೆ ರಾತ್ರೋರಾತ್ರಿ ಕೆಆರ್ ಎಸ್ ನೀರು ಬಿಡುಗಡೆ; ರೈತರ ಆಕ್ರೋಶ
Team Udayavani, Jun 30, 2017, 7:56 PM IST
ಮಂಡ್ಯ: ನೆರೆಯ ತಮಿಳುನಾಡಿಗೆ ರಾಜ್ಯ ಸರ್ಕಾರ ಕದ್ದುಮುಚ್ಚಿ ರಾತ್ರೋರಾತ್ರಿ ಕೆಆರ್ ಎಸ್ ಜಲಾಶಯದಿಂದ ನೀರು ಬಿಟ್ಟಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚೆಗೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕೆ.ಆರ್.ಎಸ್.ಗೆ 17 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ 73.65 ಅಡಿ ತಲುಪಿದೆ. ಏತನ್ಮಧ್ಯೆ ರಾಜ್ಯ ಸರ್ಕಾರವು ತಮಿಳುನಾಡಿಗೆ 2500 ಕ್ಯೂಸೆಕ್ ನೀರನ್ನು ಹರಿಸುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಡ್ಯ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತ್ಯೇಕವಾಗಿ ಹೋರಾಟ ನಡೆಸಿ, ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಇನ್ನೊಂದು ಕಡೆ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಎಲ್ಲೆಡೆ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು ಭಿಗಿ ಭದ್ರತೆ ಏರ್ಪಡಿಸಲಾಗಿದೆ.
ಕೃಷ್ಣರಾಜಸಾಗರ ಬಳಿ ರೈತರು ಪ್ರತಿಭಟನೆ ನಡೆಸುವ ಸಾಧ್ಯತೆ ಹಾಗೂ ನದಿಗೆ ಇಳಿದು ಪ್ರತಿಭಟನೆ ನಡೆಸುವರೆಂಬ ಕಾರಣದಿಂದಾಗಿ ಕೆ.ಆರ್.ಎಸ್. ಸುತ್ತಮುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ.