ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಸಿದ್ದು ಭರವಸೆ
Team Udayavani, Aug 19, 2018, 11:23 AM IST
ನಂಜನಗೂಡು: ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಸಂಜೆ ನಂಜನಗೂಡಿನ ನೆರೆ ಪೀಡಿತ ಶ್ರೀಕಂಠೇಶ್ವರನ ಸ್ನಾನಘಟ್ಟ, ತೋಪಿನ ಬೀದಿ, ರಾಷ್ಟ್ರೀಯ ಹೆದ್ದಾರಿ, ಕುರುಬಕೇರಿಗೆ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಗಿರಿಜಾ ಕಲ್ಯಾಣ ಮಂದಿರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ. ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾವು ಚಿಕ್ಕವರಿದ್ದಾಗ ಈ ರೀತಿ ಪ್ರವಾಹವನ್ನು ನೋಡಿದ್ದೆ. ಬಳಿಕ ಇದೇ ಮೊದಲ ಬಾರಿಗೆ ತರಹದ ನೆರೆ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಈ ಕುರಿತು ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಸಂಸದ ಆರ್.ಧ್ರುವನಾರಾಯಣ. ವರುಣಾ ಶಾಸಕ ಡಾ ಯತೀಂದ್ರ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ನಗರಸಭಾ ಅಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಚಂದ್ರ, ಚಲವರಾಜು, ಖಾಲೀದ್, ಬಾಬು, ಮಂಜುನಾಥ, ರಾಜೇಶ್ ಇತರರಿದ್ದರು.